More

    ಪುರುಷೋತ್ತಮ ಪೂಂಜರು ಯಕ್ಷರಂಗದ ಸವ್ಯಸಾಚಿ

    ಮಂಗಳೂರು: ಯಕ್ಷಗಾನ ಕಲಾವಿದ ಪುರುಷೋತ್ತಮ ಪೂಂಜರು ಯಕ್ಷಗಾನ ರಂಗದ ಸವ್ಯಸಾಚಿಯಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಬಳಿಕ ಹಿಮ್ಮೇಳ, ಮುಮ್ಮೇಳ ಹಾಗೂ ಪ್ರಸಂಗ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯೊಂದಿಗೆ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಯಕ್ಷಗಾನ ರಂಗಕ್ಕೆ ಇಂತಹ ಮಹಾನ್ ಕಲಾವಿದರ ಸೇವೆ ಇನ್ನಷ್ಟು ಅಗತ್ಯವಾಗಿದ್ದು, ಆದಷ್ಟು ಶೀಘ್ರದಲ್ಲಿ ಅವರು ಗುಣಮುಖರಾಗಿ ಯಕ್ಷಸೇವೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದರು.
    ಶನಿವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ ಹಾಗೂ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರ ಚಿಕಿತ್ಸೆಗಾಗಿ 25 ಸಾವಿರ ರೂ ಚೆಕ್ ವಿತರಿಸಿ ಮಾತನಾಡಿದರು.
    ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಹಾಗೂ ಅರ್ಥಧಾರಿ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ ಪುರುಷೋತ್ತಮ ಪೂಂಜರು ಯಕ್ಷಗಾನದ ಹಿರಿಯ ಭಾಗವತರು ಮತ್ತು ಶ್ರೇಷ್ಠ ಪ್ರಸಂಗಕರ್ತರು. ಜೊತೆಗೆ ಯಕ್ಷಗಾನ ರಂಗದ ಸರ್ವಾಂಗಗಳನ್ನು ಬಲ್ಲ ಮಹಾನ್ ಕಲಾವಿದ. ತನ್ನ ಮನೆಯನ್ನೇ ಗುರುಕುಲವಾಗಿಸಿ ನೂರಾರು ಶಿಷ್ಯರನ್ನು ರೂಪಿಸಿದ ಅಪೂರ್ವ ವಿದ್ವಾಂಸರು. ಅವರು ಶೀಘ್ರ ಗುಣಮುಖರಾಗಿ ಯಕ್ಷಗಾನ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.
    ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಶ್ರೀಪತಿ ಕಲ್ಲೂರಾಯ ಸ್ವಾಗತಿಸಿ ಶುಭಾಶಂಸನೆಗೈದರು. ಶೋಭಾ ಪುರುಷೋತ್ತಮ ಪೂಂಜ, ದೀವಿತ್ ಎಸ್.ಕೋಟ್ಯಾನ್, ಸತೀಶ್ ಕೊಣಾಜೆ, ಸ್ವಾತಿ ಎಸ್.ರಾವ್, ಮಯೂರ್ ನಾಯ್ಗ, ಕೀರ್ತನ್ ನಾಯ್ಗ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts