ಕಾರವಾರ: ರಾಜ್ಯದ ವಿವಿಧ ನಿಗಮ, ಮಂಡಳಿಗಳ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 29 ರಂದು ಪರೀಕ್ಷೆ ನಡೆಯಲಿದೆ.
ಕಿಯೋನಿಕ್ಸ್ ಕರ್ನಾಟಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೇರಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ವಸ್ತ್ರ ಸಂಹಿತೆ ಹಾಗೂ ವಿಶೇಷ ಸೂಚನೆಗಳನ್ನು ಎಲ್ಲ ಅಭ್ಯರ್ಥಿಗಳು ಕಡ್ಡಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಧರಿಸುವಂತಿಲ್ಲ. ಹಾಗೊಮ್ಮೆ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ.
ಅಭ್ಯರ್ಥಿಗಳು ಅರ್ಧ ತೋಳಿನ ಅಂಗಿಗಳನ್ನು ಧರಿಸಬೇಕು. ಜೀನ್ಸ್ ಪ್ಯಾಂಟ್, ಕುರ್ತಾ ಪೈಜಾಮಾ ಧರಿಸುವಂತಿಲ್ಲ. ಜೇಬು ಇಲ್ಲದ ಅಥವಾ ಕಡಿಮೆ ಜೇಬುಗಳಿರುವ, ಜೇಬುಗಳಿಗೆ ಜಿಪ್ ಇಲ್ಲದ ಸಾದಾ ಪ್ಯಾಂಟ್ ಮಾತ್ರ ಧರಿಸಬೇಕು. ಅಲ್ಲದೆ, ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್
ಪಾಕೆಟ್ಗಳು ,ದೊಡ್ಡ ಬಟನ್ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು
ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು
ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು , ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಲೋಹದ ಆಭರಣಗಳನ್ನು ಯಾವುದೇ ಕಾರಣಕ್ಕೂ ಧರಿಸಬಾರದು, ಹಿಜಾಬ್ ಧರಿಸಿದಲ್ಲಿ ಪರೀಕ್ಷಾ ಕೇಂದ್ರಕ್ಕೆ ಒಂದು
ಗಂಟೆ ಮುಂಚಿತವಾಗಿ ಬಂದು ತಪಾಸಣೆಗೆ ಒಳ ಪಡಬೇಕಾಗುತ್ತದೆ.
ನಿಷೇಧಿತ ವಸ್ತುಗಳ ಪಟ್ಟಿ
ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಈ ಮುಂದೆ ಪಟ್ಟಿ ಮಾಡಲಾದ ಯಾವುದೇ
ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಇಲೆಕ್ಟ್ರಾನಿಕ್
ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್ಗಳು, ಇಯರ್ ಫೋನ್ಗಳು, ಮೈಕ್ರೋಫೋನ್ಗಳು, ಬ್ಲೂ ಟೂಥ್ ಸಾಧನಗಳು
ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ , ತಲೆಯ ಮೇಲೆ ಟೋಪಿ ಅಥವಾ
ಯಾವುದೇ ವಸ್ತ್ರವನ್ನು ಧರಿಸುವುದನ್ನು ಬಾಯಿ , ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು /ಸಾಧನವನ್ನು ಧರಿಸುವುದನ್ನು
ನಿಷೇಧಿಧಿಸಿದೆ. ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ.
ಇವುಗಳನ್ನು ತನ್ನಿ
ಪ್ರವೇಶ ಪತ್ರ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಎರಡು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಪೋಟೋವನ್ನು ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ. ಪಾರದರ್ಶಕವಾದ (ಲೇಬಲ್ ರಹಿತ) ಕುಡಿಯುವ ನೀರಿನ
ಬಾಟಲ್ಗಳನ್ನು ತರಲು ಅನುಮತಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ
ಹೋಗಲು ಅನುಮತಿ ಇರುವುದಿಲ್ಲ.
ಪರೀಕ್ಷಾ ಕೇಂದ್ರದ ಸುತ್ತ ಮುತ್ತಲಿನ 200 ಮೀ, ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ, 144 ರನ್ವಯ ನಿಷೇಧಾಜ್ಞೆಯನ್ನು
ಹೊರಡಿಸುವುದರಿಂದ ಅಭ್ಯರ್ಥಿಗಳ ಪಾಲಕರು, ಸಂಬಂಧಿಕರು, ಪೋಷಕರು ಪರೀಕ್ಷಾ ಕೇಂದ್ರದ ಮುಂಭಾಗ ಅಥವಾ ಆಸು ಪಾಸಿನಲ್ಲಿ
ನಿಲ್ಲತಕ್ಕದ್ದಲ್ಲ.
ಇನ್ನಷ್ಟು ವಿವರಗಳಿಗೆ ಇಲ್ಲಿ ನೋಡಬಹುದು: https://cetonline.karnataka.gov.in/kea/
ಪರೀಕ್ಷೆ ಮುಕ್ತಾಯವಾಗುವವರೆಗೆ ಅಭ್ಯರ್ಥಿಗಳು ಹೊರಗೆ ಬರದೇ ಇರುವುದರಿಂದ ಅಂತಹ ಪಾಲಕರನ್ನು ಸದ್ರಿ ಸ್ಥಳದಿಂದ ತೆರವುಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಯಿಂದ ಕ್ರಮ ಜರುಗಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ವಿಡಿಯೋ ಸಂವಾದ ಸಭೆಯಲ್ಲಿ ನಿರ್ದೇಶಿಸಿದಂತೆ ವಿಳಂಭವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಪ್ರವೇಶ ನಿರ್ಭಂಧಿಸುವಂತೆ
ನಿರ್ದೇಶನ ನೀಡಿದ್ದು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮೇಲ್ಕಂಡ ಎಲ್ಲಾ ಸೂಚನೆಗಳನ್ನು ವಿವರವಾಗಿ
ಅರ್ಥೈಸಿಕೊಂಡು, ಯವುದೇ ಗೊಂದಲಗಳಿಗೆ ಆಸ್ಪದ ನೀಡದೇ ಕರ್ತವ್ಯ ನಿರ್ವಹಿಸುವಂತೆ ಹಾಗೂ ಎಲ್ಲಾ ಪರೀಕ್ಷಾರ್ಥಿಗಳು ಹಾಗೂ
ಪೋಷಕರು ಎಲ್ಲಾ ಸೂಚನೆಗಳನ್ನು ತಪ್ಪದೇ ಕಡ್ಡಾಯವಾಗಿ ಪಾಲಿಸುಂವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
3
ಅವ್ಯವಹಾರ ನಡೆಯದಂತೆ ಎಚ್ಚರ ವಹಿಸಿ
ಜಿಲ್ಲೆಯ ಅಂಕೊಲ ತಾಲೂಕಿನ 1, ಭಟ್ಕಳದ 3, ಹಳಿಯಾಳದ 4, ಹೊನ್ನಾವರದ 2, ಕಾರವಾರದ 6, ಕುಮುಟಾ ದ 2, ಶಿರಸಿಯ
4 ಹಾಗೂ ಯಲ್ಲಾಪುರದ 2 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 24 ಕೇಂದ್ರಗಳಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ
ಹುದ್ದೆಗಳಿಗೆ ಸ್ಪರ್ದಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಈ ಎಲ್ಲ ಪರೀಕ್ಷಾ ಕೇಂಧ್ರಗಳಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ
ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ
ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿ ಅವರು ಮಾತನಾಡಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ
ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ನಿಯಮಾವಳಿಗಳನ್ವಯ ಯಾವುದೂ ಗೊಂದಲ
ಮತ್ತು ದೂರುಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಗೃಹದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು
ಒದಗಿಸುವಂತೆ ತಿಳಿಸಿದ ಅವರು, ಅಭ್ಯರ್ಥಿಗಳಿಗೆ ಅವರ ನೊಂದಣಿ ಸಂಖ್ಯೆಗೆ ಅನುಗುಣವಾಗಿ ನಿಗಧಿಪಡಿಸಿರುವ ಕೊಠಡಿ ಸಂಖ್ಯೆಯ
ಮಾಹಿತಿಯನ್ನು ಕೇಂದ್ರದ ಪ್ರವೇಶದಲ್ಲೆ ಸ್ಪಷ್ಟವಾಗಿ ಗೋಚರಿಸುವಂತೆ ಅಳವಡಿಸಬೇಕು ಈ ಬಗ್ಗೆ ಅಭ್ಯರ್ಥಿಗಳಿಗೆ ಯಾವುದೇ ಗೊಂದಲ
ಉಂಟಾಗದಂತೆ ನೋಡಿಕೊಳ್ಳಿ ಎಂದರು.
ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ನಿಗಧಿತ ಅವಧಿಯೊಳಗೆ ಪರೀಕ್ಷಾ ಕೆಂದ್ರಕ್ಕೆ ತಲುಪಿಸಲು ಮತ್ತು ಪರೀಕ್ಷೆಯ ನಂತರ ಉತ್ತರ
ಪತ್ರಿಕೆಗಳನ್ನು ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ನಿಗಧಿತ ಸ್ಥಳಕ್ಕೆ ತಲುಪಿಸಲು ಕ್ರಮ ಕೈಗೊಳ್ಳಿ ಹಾಗೂ ಪರೀಕ್ಷಾ ಕಾರ್ಯಕ್ಕೆ
ನಿಯೋಜಿಸಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಪರೀಕ್ಷಾ ದಿನದಂದು ನಿರ್ವಹಿಸಬೇಕಾದ ತಮ್ಮ ಕರ್ತವ್ಯಗಳ ಕುರಿತು ಅಗತ್ಯ
ತರಬೇತಿ ನಿಡುವಂತೆ ನಿರ್ದೇಶನ ನೀಡಿದರು.
ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪರೀಕ್ಷಾ ದಿನದಂದು ಎಲ್ಲಾ ತಾಲೂಕು ಕೇಂದ್ರಗಳಿಗೆ ಆಗಮಿಸಲು ಮತ್ತು ವಾಪಸ್ ತೆರಳಲು
ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಹೆಚ್ಚುವರಿ ಬಸ್ ಸೇವೆ ಒದಗಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ
ಕೈಗೊಳ್ಳುವಂತೆ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್
ಅಡಚಣೆಯಾಗದಂತೆ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ನ.5ಕ್ಕೆ ಮೂರು ಸ್ಪರ್ಧಾತ್ಮಕ ಪರೀಕ್ಷೆ; ಕೊನೆಗೂ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ ಮುಂದಕ್ಕೆ
ಪರೀಕ್ಚೆಗೆ ಆಗಮಿಸುವ ಎಲ್ಲ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಿಗಧಿತ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ
ಪಾಲಿಸುವಂತೆ ಹಾಗೂ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳ ಒಳಗೆ ತೆಗೆದುಕೊಂಡು ಬಾರದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಪರೀಕ್ಷೆಗಳು ನಡೆಯುವ ಎಲ್ಲಾ ತಾಲೂಕುಗಳ ತಹಸೀಲ್ದಾರ್ ಗಳು ಪರೀಕ್ಷಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿ
ಕೈಗೊಂಡಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸುವಂತೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯಲು
ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ,
ಜಿಲ್ಲೆಯಲ್ಲಿ ಪಾರದರ್ಶಕ ಮತ್ತು ದೋಷ ರಹಿತ ಮತ್ತು ವ್ಯವಸ್ಥಿತ ರೀತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಪರೀಕ್ಷಾ ನೊಡೆಲ್ ಅಧಿಕಾರಿ ಸತೀಶ್ ನಾಯ್ಕ್ ಹಾಗೂ ಪರೀಕ್ಷಾ
ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಪರೀಕ್ಷಾ ಕೇಂದ್ರಗಳು ವೀಕ್ಷಕರು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.