ಕೊಪ್ಪ: ಇಲ್ಲಿನ ಮೆಸ್ಕಾಂ ಇಲಾಖೆಯಲ್ಲಿ ಅಧಿಕಾರಿಗಳೇ ಗುತ್ತಿಗೆದಾರ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಸಂಬಳ ಪಡೆಯುತ್ತಿರುವ ಅಧಿಕಾರಿಗಳು ಗುತ್ತಿಗೆ ಕೆಲಸ ಮಾಡಿ ಸರ್ಕಾರಕ್ಕೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಶಾನುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಕರುವಾನೆ ಆಕ್ರೋಶ ವ್ಯಕ್ತಪಡಿಸಿದರು.
ಪುರಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಕೊಪ್ಪ ವಿಭಾಗ ವ್ಯಾಪ್ತಿಯ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆ ಒಳಗೆ ಗುತ್ತಿಗೆ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಮಲೆನಾಡಿನಲ್ಲಿ ಲೈನ್ಮನ್ಗಳ ಕೊರತೆ ನೀಗಿಸಬೇಕು. ಐಪಿ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹಳೇ ತಂತಿಗಳನ್ನು ಬದಲಾಯಿಸಬೇಕು. ಮುತ್ತಿನಕೊಪ್ಪದಿಂದ ಎಕ್ಸ್ ಪ್ರೆಸ್ ಲೈನ್ ಸಂಪರ್ಕ ನಿರಂತರವಾಗಿ ಸಿಗುವಂತಾಗಬೇಕು. ಮೆಸ್ಕಾಂನಲ್ಲಿ ಸರ್ಕಾರಕ್ಕೆ ಮೋಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಚಿಕ್ಕಮಗಳೂರು ವೃತ್ತ ಅಧೀಕ್ಷಕ ಇಂಜಿನಿಯರ್ ಲೋಕೇಶ್ ಮಾತನಾಡಿ, ಅಧಿಕಾರಿಗಳು ಈ ಕೂಡಲೇ ಅಂತಹ ಕೆಲಸ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೆಡಿಪಿ ಸದಸ್ಯ ರಾಜಶಂಕರ್ ಮಾತನಾಡಿ, ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ದಲಿತರಿಗೆ ಸಿಗಬೇಕಾದ ಸೌಲಭ್ಯವನ್ನು ಬೇರೆಯವರು ಪಡೆಯುತ್ತಿದ್ದಾರೆ. ವಿದ್ಯುತ್ ಪರಿವರ್ತಕ ಅಳವಡಿಸಿಕೊಳ್ಳುತ್ತಿದ್ದಾರೆ. ಜಾತಿ ದೃಢೀಕರಣ ಪತ್ರದ ಜತೆಗೆ ಶಾಲಾ ದಾಖಲಾತಿ ಆಧರಿಸಿ ಸೌಲಭ್ಯ ನೀಡಬೇಕು ಎಂದರು.