More

    ಕೆಪಿಟಿಸಿಎಲ್ ನೌಕರರ ಸಂಘದ ಚುನಾವಣೆಗೆ ಹೈಕೋರ್ಟ್ ಅನುಮತಿ

    ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಇದೇ 23ರಂದು ನಿಗದಿಯಾಗಿರುವ ಚುನಾವಣೆಯನ್ನು ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

    ಚುನಾವಣೆ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಸೂಕ್ತವಾಗಿ ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿ ಆರ್. ಮುರಳೀಧರ ಸೇರಿ ಸಂಘದ 10 ಮಂದಿ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರ ರಜಾಕಾಲದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ನ್ಯಾಯಪೀಠ, ಚುನಾವಣೆಯ ಫಲಿತಾಂಶವು ಅರ್ಜಿ ಕುರಿತು ಹೈಕೋರ್ಟ್ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ, ಅರ್ಜಿ ವಿಚಾರಣೆಯನ್ನು 27ಕ್ಕೆ ಮುಂದೂಡಿದೆ.

    ಅರ್ಜಿದಾರರ ಪರ ವಕೀಲರು, ಉದ್ದೇಶಿತ ಚನಾವಣೆಯನ್ನು ಯಾವುದೇ ಆಧಾರವಿಲ್ಲದೆ ನಡೆಸಲಾಗುತ್ತಿದೆ. ಚುನಾವಣೆ ನಡೆಸಲು ನೌಕರರ ಸಂಘ ಅನುಸರಿಸುತ್ತಿರುವ ನಿಯಮಗಳಿಗೆ ಸಂಬಂಧಿಸಿದ ದಾವೆಯು ಬೆಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.

    ಸಂಘಕ್ಕೆ ಚುನಾವಣೆ ನಡೆಸುವುದಾದರೆ, ಚುನಾವಣಾ ಮಾದರಿ ನಿಯಮಗಳು ಮತ್ತು ನಿಬಂಧನೆಗಳಿಗೆ ಅನುಸಾರ ನಡೆಸಬೇಕು ಎಂದು 2024ರ ಫೆ.28ರಂದು ಹೈಕೋರ್ಟ್ ಈ ಹಿಂದೆ ನಿರ್ದೇಶಿಸಿದೆ. ಹೀಗಿದ್ದರೂ ಚುನಾವಣೆಗೆ 18ರಂದು ವೇಳಾಪಟ್ಟಿ ಪ್ರಕಟಿಸಲಾಗಿದೆ ಮತ್ತು ಮೇ 23ರಂದು ಚುನಾವಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

    ಈ ವಾದವನ್ನು ಆಕ್ಷೇಪಿಸಿ ಕೆಪಿಟಿಸಿಎಲ್ ನೌಕರರ ಸಂಘದ ಪರ ವಕೀಲರು, ಅರ್ಜಿದಾರರ ಅರ್ಜಿಗೆ ವಿಚಾರಣೆಗೆ ಯೋಗ್ಯವಾಗಿಲ್ಲ. ಚುನಾವಣೆಯನ್ನು ಕೆಪಿಟಿಸಿಎಇಲ್ ನೌಕರರ ಸಂಘದ ಅಧಿನಿಯಮ ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ನಡೆಸಲಾಗುತ್ತಿದೆ.

    ಇನ್ನೂ ಚುನಾವಣಾ ಮಾದರಿ ನಿಯಮಗಳು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಯಾವುದೇ ನಿರ್ದೇಶನ ನೀಡಿಲ್ಲ. ವೇಳಾಪಟ್ಟಿ ಪ್ರಕಟವಾದ ನಂತರ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂಬುದಾಗಿ ಕಾನೂನು ಹೇಳುತ್ತದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

    ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಚುನಾವಣೆ ನಡೆಸಲು ಅನುಮತಿ ನೀಡಿ ಮಧ್ಯಂತರ ಆದೇಶ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts