ಬೆಂಗಳೂರು: ಕಾಚರಕನಹಳ್ಳಿಯ ಕೊಳೆಗೇರಿ ಪ್ರದೇಶದಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ವಿುಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಘೋಷಿಸಲಾಗಿದ್ದ ತಲಾ 6,100 ರೂ. ಪರಿಹಾರ ಮೊತ್ತವನ್ನು 14,100 ರೂ.ಗೆ ಹೆಚ್ಚಿಸಲಾಗಿದೆ ಎಂದು ಹೈಕೋರ್ಟ್ಗೆ ಸರ್ಕಾರ ತಿಳಿಸಿದೆ.
ವಕೀಲೆ ವೈಶಾಲಿ ಹೆಗಡೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಘಟನೆಯಲ್ಲಿ ಮನೆ ಕಳೆದುಕೊಂಡ 170 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 14,100 ರೂ.ಗೆ ಹೆಚ್ಚಳ ಮಾಡಲಾಗಿದೆ. ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸರ್ಕಾರದ ಪರ ವಕೀಲ ವಿಕ್ರಂ ಹುಯಿಲಗೋಳ ತಿಳಿಸಿದರು.
ಇದನ್ನೂ ಓದಿ: ಸ್ಯಾಂಡಲ್ವುಡ್ ಮಾದಕ ವ್ಯಸನಿಗಳ ಹೆಸರು ಹೇಳಿದ್ದ ಇಂದ್ರಜಿತ್ ಲಂಕೇಶ್ಗೆ ಸಿಸಿಬಿ ನೋಟಿಸ್…
ಸಂತ್ರಸ್ತ ಕುಟುಂಬಗಳಿಗೆ ಘೊಷಿಸಿರುವ ಪರಿಹಾರ ಮೊತ್ತವನ್ನು ಯಾವಾಗ ಹಾಗೂ ಯಾವ ವಿಧಾನದ ಮೂಲಕ ಪಾವತಿಸಲಾಗುತ್ತದೆ? 2016 ಮೇ 17ರಂದು ಡಿಸಿ ಸಲ್ಲಿಸಿರುವ ಪ್ರಸ್ತಾವನೆ ಕುರಿತು ಈವರೆಗೆ ಏಕೆ ಕ್ರಮ ಕೈಗೊಂಡಿಲ್ಲ, ಮುಂದೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಮಾಹಿತಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ಸೆ.18ಕ್ಕೆ ವಿಚಾರಣೆ ಮುಂದೂಡಿತು.
ಸದಸ್ಯ ಕಾರ್ಯದರ್ಶಿ ಸ್ಥಾನಕ್ಕೆ ಒಬ್ಬರನ್ನು ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ