More

    ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

    ಬೆಂಗಳೂರು : ಅಪರಾಧ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದು, ಸಾರ್ವಜನಿಕ ನೆಮ್ಮದಿಗೆ ಧಕ್ಕೆ ಉಂಟಮಾಡುತ್ತಿರುವ ಆರೋಪದ ಮೇಲೆ ಮಳವಳ್ಳಿ ತಾಲೂಕಿನ ಹಲಗೂರು ಟೌನ್ ನಿವಾಸಿ ಆರ್. ಪ್ರಮೋದ್ ಎಂಬುವರನ್ನು ಮಂಡ್ಯ ಜಿಲ್ಲೆಯಿಂದ ಕೋಲಾರಕ್ಕೆ ಮೂರು ತಿಂಗಳು ಗಡಿಪಾರು ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

    ಗಡಿಪಾರು ಆದೇಶ ರದ್ದು ಕೋರಿ ಪ್ರಮೋದ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

    ಗಡಿಪಾರು ಮಾಡುವ ಮುನ್ನ ವಿವರಣೆ ಕೇಳಿ ಅರ್ಜಿದಾರರಿಗೆ ಶೋಕಾಸ್ ನೋಟಿಸ್ ತಲುಪಿಸಿಲ್ಲ. ಆತ ಬೆಂಗಳೂರಿನಲ್ಲಿ ವಾಸವಿದ್ದು, ಆತನ ಹಲಗೂರಿನ ಮನೆಗೆ ಪೊಲೀಸರು ನೋಟಿಸ್ ಅಂಟಿಸಿ ಹೋಗಿದ್ದಾರೆ. ಆ ನೋಟಿಸ್‌ನಲ್ಲಿ ವಿವರಣೆ ನೀಡಲು ಉಪ ವಿಭಾಗಾಧಿಕಾರಿ ಮುಂದೆ ಪ್ರಮೋದ್ ಹಾಜರಾಗಬೇಕಿದ್ದ ದಿನಾಂಕವನ್ನೇ ನಮೂದಿಸಿಲ್ಲ. ಅವರಿಗೆ ತಿಳಿಯದಂತೆ ಗಡಿಪಾರು ಆದೇಶ ಮಾಡಲಾಗಿದ್ದು, ಮುಳಬಾಗಿಲು ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ.

    ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಸೂಕ್ತ ದಾಖಲೆ ನೀಡಿಲ್ಲ. ಕೇವಲ ಊಹಾಪೋಹದ ಮೇಲೆ ಉಪ ವಿಭಾಗಾಧಿಕಾರಿಗೆ ವರದಿ ನೀಡಿದ್ದಾರೆ. ಆದ್ದರಿಂದ ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

    ಅರ್ಜಿದಾರರಿಗೆ ಶೋಕಾಸ್ ನೋಟಿಸ್ ರವಾನಿಸದೆ, ವಿವರಣೆ ಕೇಳದೆ ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ. ಹೀಗಾಗಿ ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿತು.

    ಹಲಗೂರು ಠಾಣಾ ವ್ಯಾಪ್ತಿಯಲ್ಲಿ ಪ್ರಮೋದ್ ವಿರುದ್ಧ ಕೊಲೆ ಇನ್ನಿತರ ಅಪರಾಧ ಪ್ರಕರಣಗಳು ದಾಖಲಾಗಿವೆ. ಆತ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುತ್ತಿದ್ದಾರೆ ಎಂದು ಹಲಗೂರು ಠಾಣಾ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್ಸ್‌ಪೆಕ್ಟರ್ ವರದಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ್ದ ಮಂಡ್ಯ ಉಪ ವಿಭಾಗದ ಸಹಾಯಕ ಉಪ ವಿಭಾಗಾಧಿಕಾರಿ, ಪ್ರಮೋದ್‌ನನ್ನು ಏ.2ರಿಂದ ಜು.7ರವರೆಗೆ ಮೂರು ತಿಂಗಳ ಕಾಲ ಮಂಡ್ಯ ಜಿಲ್ಲೆಯಿಂದ ಕೋಲಾರಕ್ಕೆ ಗಡಿಪಾರು ಮಾಡಿ ಏ.2ರಂದು ಆದೇಶಿಸಿದ್ದರು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts