ಕಡೂರು: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಿಂದು ಜಾಗರಣಾ ವೇದಿಕೆ ಜಿಲ್ಲಾ ಘಟಕ ನೇತೃತ್ವದಲ್ಲಿ ಸಂಘ ಪರಿವಾರದ ಪದಾಧಿಕಾರಿಗಳು ಪಟ್ಟಣದ ಕೆ.ಎಲ್.ವಿ.ವೃತ್ತದಲ್ಲಿ ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿ, ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ಪಾಠವಾಗಬೇಕು ಎಂದರು. ವೇದಿಕೆಯ ಜಿಲ್ಲಾ ಸಂಯೋಜಕ ಶಶಾಂಕ್ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪದೇಪದೆ ಹಿಂದುಗಳ ಮೇಲೆ ಹಲ್ಲೆಯಾಗುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು. ಹತ್ಯೆಯಾದ ವಿದ್ಯಾರ್ಥಿನಿಗೆ ನ್ಯಾಯ ದೊರಕಬೇಕೆಂದರೆ ಹಂತಕನಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.
ಬೀರೂರು ಶಾಖಾ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ವೇದಿಕೆ ತಾಲೂಕು ಸಂಯೋಜಕ ಹೇಮಂತ್, ಭರತ್, ಷಣ್ಮುಖ, ಅಭಿಲಾಷ್, ಶರತ್ ಇದ್ದರು.