ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಪಸಂಖ್ಯಾರ ತುಷ್ಟೀಕರಣಕ್ಕಾಗಿ ಹಿಂದುಗಳನ್ನು ಬಲಿ ಕೊಡುವ ಕೆಲಸ ನಡೆಯುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಕಾಂಗ್ರೆಸ್ ಒಂದಲ್ಲ ಒಂದು ರೀತಿಯಲ್ಲಿ ಓಲೈಕೆ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಹೀನಾಯ ಕೃತ್ಯಗಳನ್ನು ಪೋಷಣೆ ಮಾಡುತ್ತ ಬಂದಿದೆ. ಈ ಮೂಲಕ ಹಿಂದುಗಳ ಮೇಲೆ ರಾಜ್ಯ ಸರ್ಕಾರ ನಿರಂತರ ದಬ್ಬಾಳಿಕೆ ಮಾಡಿಕೊಂಡೇ ಬರುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ನೇಹಾ ಸಾವಿಗೆ ನ್ಯಾಯ ಕೊಡಿಸಬೇಕಾದ ಕಾಂಗ್ರೆಸ್ ಕೊಲೆಗಡುಕನ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಿರುವುದು ದುರದೃಷ್ಟಕರ. ಇದು ಒಂದು ವರ್ಗವನ್ನು ಓಲೈಕೆ ಮಾಡುತ್ತಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಬೇಸರ ವ್ಯಕ್ತಪಡಿಸಿದರು.
ನೇಹಾ ಹತ್ಯೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಕಾರಣ ಎಂದರೆ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಲವ್ ಪ್ರಕರಣವೆಂದು ಹೇಳಿಕೆ ನೀಡಿ ತನಿಖೆಯ ದಿಕ್ಕುತಪ್ಪಿಸುವ ಕೆಲಸ ಮಾಡಿದ್ದಾರೆ. ಒಬ್ಬ ಕಾಂಗ್ರೆಸ್ ಕಾರ್ಪೋರೇಟರ್ ಮಗಳ ಹತ್ಯೆ ಬಗ್ಗೆಯೂ ಇಷ್ಟು ಹಗುರವಾಗಿ ಮಾತನಾಡಿದರೆ ಜನಸಾಮಾನ್ಯರ ಪರಿಸ್ಥಿತಿ ಏನೆಂಬುದನ್ನು ಹಿಂದುಗಳು ಅರ್ಥ ಮಾಡಿಕೊಳ್ಳಬೇಕಿದೆ. ನೇಹಾ ಹತ್ಯೆ ಪ್ರಕರಣ ಸರಿಯಾದ ದಿಕ್ಕಿನಲ್ಲಿ ತನಿಖೆ ಆಗಬೇಕು. ಕಾನೂನಿನ ಚೌಕಟ್ಟಿನಲ್ಲಿ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸಬೇಕು. ಆತನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಆಗ್ರಹಿಸಿದರು.
ಜಿಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಂಎಲ್ಸಿ ಡಿ.ಎಸ್.ಅರುಣ್, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಎಸ್.ದತ್ತಾತ್ರಿ, ಎಸ್.ಜ್ಞಾನೇಶ್ವರ್, ಶಿವರಾಜ್, ಮಾಲತೇಶ್, ಎಂ.ಬಿ.ಹರಿಕೃಷ್ಣ, ತಲ್ಲೂರು ರಾಜು, ಎನ್.ಜೆ.ನಾಗರಾಜ್ ಸುದ್ದಿಗೋಷ್ಠಿಯಲ್ಲಿದ್ದರು.