ಹಿರಿಯೂರು: ನಾಡು-ನುಡಿ ಸಂಸ್ಕೃತಿ ರಕ್ಷಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಶ್ಲಾಘನೀಯ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲೂಕು ಕಚೇರಿ ಬಳಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಶತಮಾನದ ಇತಿಹಾಸವಿರುವ ಸಾಹಿತ್ಯ ಪರಿಷತ್ ಅತಿ ಹೆಚ್ಚು ಅಜೀವ ಸದಸ್ಯರನ್ನು ಹೊಂದಿರುವ ಏಕೈಕ ಸ್ವಾಯತ್ತ ಸಂಸ್ಥೆಯಾಗಿದೆ. ನಮ್ಮ ನಾಡು, ನುಡಿ, ಕಲೆ, ಸಂಸ್ಕೃತಿ, ಸಾಹಿತ್ಯ ಬೆಳವಣಿಗೆಗೆ ಸಾಹಿತ್ಯ ಪರಿಷತ್ ಅಗತ್ಯ ಎಂದರು.
ಪರಿಷತ್ ಜಿಲ್ಲಾಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಮಾತನಾಡಿ, ಕನ್ನಡಿಗರಲ್ಲಿ ಮಾತೃಭಾಷೆ ಬಗ್ಗೆ ಅಭಿಮಾನ ಬೆಳೆಯಬೇಕಾದರೆ ಪ್ರತಿಯೊಬ್ಬರು ಸಂಘದ ಸದಸ್ಯರಾಗಿ ನಾಡು ಕಟ್ಟುವ ಕೆಲಸಕ್ಕೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ತಾಲೂಕು ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಮೂರು ದಿನ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, 500 ರೂ. ಶುಲ್ಕ ಪಾವತಿಸಿ ಅಜೀವ ಸದಸ್ಯತ್ವ ಪಡೆಯಬೇಕೆಂದು ಮನವಿ ಮಾಡಿದರು.
ನಗರಸಭೆ ಸದಸ್ಯ ದಾದಾಪೀರ್, ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ನಟರಾಜ್, ನಿಜಲಿಂಗಪ್ಪ, ತಿಪ್ಪೇಸ್ವಾಮಿ, ಕೆ.ಸಿ.ಹೊರಕೇರಪ್ಪ, ದಿವುಶಂಕರ್ ಇತರರಿದ್ದರು.