ಹಿರಿಯೂರು: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಿಂದ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆಯಂತಾಗಿದೆ. ಬರ, ಅಂತರ್ಜಲ ಕುಸಿತ, ಬೆಳೆ ನಷ್ಟ, ರೈತರ ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರ ಬದುಕು ಮೂರಾಬಟ್ಟೆಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬಯಲು ಸೀಮೆಯಲ್ಲಿ ಈರುಳ್ಳಿ, ಶೇಂಗಾ, ರೇಷ್ಮೆ, ದಾಳಿಂಬೆ ಕೃಷಿಯಲ್ಲಿ ಹೆಚ್ಚಿನ ರೈತರು ತೊಡಗಿಸಿಕೊಂಡಿದ್ದು, ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ಘೋಷಣೆಗೆ ಸೀಮಿತವಾಗದೆ ಎಲ್ಲ ರೈತರಿಗೆ ತಲುಪಬೇಕು, ಎಪಿಎಂಸಿ ಮಾರುಕಟ್ಟೆ, ವಿದ್ಯುತ್ ಇತರೆ ಕ್ಷೇತ್ರಗಳನ್ನು ಖಾಸಗೀಕರಣ ಗೊಳಿಸುವುದನ್ನು ಸರ್ಕಾರ ತಕ್ಷಣ ಕೈ ಬಿಟ್ಟು ರೈತ ಸ್ನೇಹಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ರೈತರು ಮನವಿ ಮಾಡಿದರು.
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ತಾಲೂಕಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ತಾಲೂಕು ಕಾರ್ಯಾಧ್ಯಕ್ಷ ಶಿವಕುಮಾರ್, ಕಲ್ಪನಾ, ರಂಗಸ್ವಾಮಿ, ತಿಮ್ಮಣ್ಣ, ಸಿದ್ದಣ್ಣ ಇತರರಿದ್ದರು.
ರೈತರ ಬೇಡಿಕೆಗಳು: ಹಣ್ಣು, ತರಕಾರಿ ಬೆಳೆಗಾರರಿಗೆ 50 ಸಾವಿರ ರೂ. ಪರಿಹಾರ ಘೋಷಣೆ. ಡಾ.ಸ್ವಾಮಿನಾಥನ್ ವರದಿ ಜಾರಿ. ಲಾಕ್ಡೌನ್ ಅವಧಿಯಲ್ಲಿ ಬೆಳೆ ನಷ್ಟದಿಂದ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ. ಕೃಷಿ ಕೂಲಿ ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ.