ಹಿರಿಯೂರು: ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆತ್ಮ ತೃಪ್ತಿ ದೊರೆಯಲಿದೆ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಅಧ್ಯಕ್ಷ ಎಚ್.ಎಸ್.ಸುಂದರ್ರಾಜ್ ಹೇಳಿದರು.
ಇಲ್ಲಿನ ಸರ್ಕಾರಿ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶತಮಾನೋತ್ಸವ ಆಚರಣೆ ಅಂಗವಾಗಿ ‘ನಮ್ಮ ನಡೆ ಮಾನವೀಯತೆ ಸೇವೆಯ ಧನ್ಯತೆಗಾಗಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಶಕಗಳಿಂದ ಬಡವರು, ದೀನ ದಲಿತರ ಶ್ರೇಯೋಭಿವೃದ್ಧಿಗಾಗಿ ಹಾಗೂ ವೈದ್ಯಕೀಯ-ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು.
ರೋಟರಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಎಂ.ಎಸ್.ರಾಘವೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಶಿಸ್ತು, ಸಂಸ್ಕಾರ, ಆಚಾರ-ವಿಚಾರ, ನಾಯಕತ್ವ ಗುಣ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯದ ಜತೆ ಸಾಮಾಜಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಡಾ.ಡಿ.ಧರಣೀಂದ್ರಯ್ಯ, ದೈಹಿಕ ಶಿಕ್ಷಣ ನಿರ್ದೇಶಕ ತಿಪ್ಪೇಸ್ವಾಮಿ, ಮಹಾಬಲೇಶ್ವರ ಶ್ರೇಷ್ಠಿ, ಬಿ.ಕೆ.ನಾಗಣ್ಣ, ದೇವರಾಜ್, ತ್ರಿಯಂಬಕೇಶ್ವರ, ಸತೀಶ್ ಬಾಬು, ಆನಂದ್ ಶ್ರೇಷ್ಠಿ ಇತರರಿದ್ದರು.