More

    ಇತಿಹಾಸಕಾರರು ಚನ್ನಮ್ಮನ ಕಿತ್ತೂರು ಮೇಲೆ ಬೆಳಕು ಚೆಲ್ಲಲಿ

    ಬೈಲಹೊಂಗಲ: ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಉತ್ತರ ಭಾರತದಲ್ಲಿ ಜನಿಸಿದ್ದರೆ ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆಯುತ್ತಿದ್ದರು. ಆದರೆ ಇಲ್ಲಿನವರ ಇಚ್ಛಾಶಕ್ತಿ ಕೊರತೆಯಿಂದ ಅವರು ಕಿತ್ತೂರು ನಾಡಿಗೆ ಮಾತ್ರ ಸೀಮಿತವಾಗಿರುವುದು ದುರ್ದೈವ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಹೊರಪೇಟೆ ಮಲ್ಲೇಶಪ್ಪ ಹೇಳಿದರು.

    ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯ ಅಕ್ಕಮಹಾದೇವಿ ಮಹಿಳಾ ಪದವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕಿತ್ತೂರು ರಾಣಿ ಚನ್ನಮ್ಮ ಸಂಶೋಧನೆ ಸಂಸ್ಥೆ ಕಿತ್ತೂರು, ಪ್ರಾದೇಶಿಕ ಪತ್ರಾಗಾರ ಇಲಾಖೆ ಧಾರವಾಡ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣನ ಚರಿತ್ರೆ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

    ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ನೇತೃತ್ವದಲ್ಲಿ ಹೊತ್ತಿದ ಸ್ವಾತಂತ್ರ್ಯ ಚಳವಳಿಯ ಕಿಚ್ಚು ದೇಶಾದ್ಯಂತ ಜ್ವಾಲೆಯಾಗಿ ಹೊರಹೊಮ್ಮಿ ಬ್ರಿಟಿಷರು ರಾತ್ರೋರಾತ್ರಿ ಭಾರತ ಬಿಟ್ಟು ತೊಲಗುವಂತೆ ಮಾಡಿತು. ಇತಿಹಾಸಕಾರರು, ವಿದ್ವಾಂಸರು, ಸಾಹಿತಿಗಳು ಈ ಕುರಿತು ಸಮಗ್ರವಾಗಿ ಸಂಶೋಧನೆ ಮಾಡಿ ಬೆಳಕು ಚೆಲ್ಲುವಂತಹ ಕೆಲಸ ಮಾಡಬೇಕಿದೆ ಎಂದರು.

    ವಿಚಾರ ಸಂಕಿರಣ ಉದ್ಘಾಟಿಸಿದ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಸ್ವಾತಂತ್ರ್ಯಕ್ಕೆ ಅನೇಕ ವೀರರು ತ್ಯಾಗ, ಬಲಿದಾನ ಮಾಡಿದ್ದಾರೆ. ಅವರೆಲ್ಲರ ಸ್ಮರಣೆ ಪ್ರತಿನಿತ್ಯವಾಗಬೇಕು ಎಂದರು.

    ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ನಮ್ಮ ನಾಡು ವೀರರು, ದೇಶಪ್ರೇಮಿಗಳು, ಸ್ವಾಭಿಮಾನಿಗಳ ನಾಡು. ಸರ್ಕಾರ ಚನ್ನಮ್ಮನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

    ಸಿ.ಕೆ.ಮೆಕ್ಕೇದ, ಈಶ್ವರ ಹೋಟಿ ಮಾತನಾಡಿದರು. ಧಾರವಾಡ ಕರ್ನಾಟಕ ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ. ಈರಣ್ಣ ಪತ್ತಾರ ಆಶಯ ನುಡಿ ಹೇಳಿದರು.
    ಸಂಗೊಳ್ಳಿ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ, ಸಂಸ್ಥೆಯ ಅಧ್ಯಕ್ಷ ಬಿ.ಬಿ.ಗಣಾಚಾರಿ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಧಾರವಾಡದ ಪ್ರಾದೇಶಿಕ ಪತ್ರಾಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ರಾಯಣ್ಣ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ರಾಜು ಸೊಗಲ, ಪ್ರಾಚಾರ್ಯ ಡಾ.ಸಿ.ಬಿ.ಗಣಾಚಾರಿ ಇದ್ದರು. ಎಂ.ಎಚ್.ಪೆಂಟೇದ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿವಿಧ ವಿಷಯಗಳ ಕುರಿತು ವಿಚಾರ ಸಂಕಿರಣ ಜರುಗಿತು. ನೂರಾರು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts