ಹೊಳಲ್ಕೆರೆ: ಬಿತ್ತನೆ ಬೀಜ ಮತ್ತು ಗೊಬ್ಬರ ಮಾರಾಟದ ಜತೆ ರೈತರಿಗೆ ಕಡ್ಡಾಯವಾಗಿ ರಸೀದಿ ನೀಡಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಸದಾಶಿವ ಎಚ್ಚರಿಸಿದ್ದಾರೆ.
ತಾಲೂಕಿನ ಕೃಷಿ ಇಲಾಖೆ ಆವರಣದಲ್ಲಿ ಮಂಗಳವಾರ ಬಿತ್ತನೆ ಬೀಜ ಮತ್ತು ಗೊಬ್ಬರ ಮಾರಾಟಗಾರರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ರೈತರು ಕೃಷಿ ಚಟುವಟಿಕೆ ಆರಂಭಿಸುವ ಸಿದ್ಧತೆ ನಡೆಸಿದ್ದಾರೆ. ಅವರಿಗೆ ಬೀಜ ಮತ್ತು ಗೊಬ್ಬರಗಳನ್ನು ಸಕಾಲದಲ್ಲಿ ಪೂರೈಸುವ ಕರ್ತವ್ಯ ಇಲಾಖೆ ಮೇಲಿದೆ. ಸರ್ಕಾರಿ ಸೌಲಭ್ಯಗಳ ಜತೆ ಅಧಿಕೃತ ಖಾಸಗಿ ಕಂಪನಿಗಳ ಸೌಲಭ್ಯಗಳನ್ನು ರೈತರು ಪಡೆದುಕೊಳ್ಳಲಿದ್ದಾರೆ ಎಂದರು.
ಗೊಬ್ಬರದ ಅಂಗಡಿಯವರು ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ಕಳಪೆ ಬಿತ್ತನೆ ಬೀಜ ಮಾರುವ ಪ್ರಕರಣಗಳು ಹೆಚ್ಚು. ಅನಗತ್ಯವಾಗಿ ದಾಸ್ತಾನು ಮಾಡಿ, ರೈತರಿಗೆ ದುಪ್ಪಟ್ಟು ಬೆಲೆಯಲ್ಲಿ ಮಾರಿದರೆ ಕಾನೂನು ಕ್ರಮ ಖಚಿತ ಎಂದು ಎಚ್ಚರಿಸಿದರು.
ಸಹಾಯಕ ಕೃಷಿ ನಿರ್ದೇಶಕ ಶ್ರೀನಿವಾಸುಲು, ಎಡಿಎ ಪ್ರಸನ್ನಕುಮಾರ್, ಗೊಬ್ಬರ, ಬಿತ್ತನೆ ಬೀಜ ಮಾರಾಟಗಾರರ ಸಂಘದ ಅಧ್ಯಕ್ಷ ವೀರಭದ್ರಪ್ಪ ಇದ್ದರು.