ಅಥಣಿ: ಕರೊನಾ ವೈರಸ್ ನಿಯಂತ್ರಿಸಲು ಜಾರಿಗೊಳಿಸಿರುವ ಸಂಡೇ ಲಾಕ್ಡೌನ್ಗೆ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ವಾಹನ ಸಂಚಾರ ಬಂದ್ ಆಗಿದ್ದರಿಂದ ಪ್ರಮುಖ ರಾಜ್ಯ ಹೆದ್ದಾರಿಗಳು, ಪಟ್ಟಣದ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಬೆಳಗ್ಗೆ ಮಾತ್ರ ತರಕಾರಿ, ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪಟ್ಟಣ ಸೇರಿ ತಾಲೂಕಿನ ಹಳ್ಳಿಗಳಲ್ಲಿಯೂ ಜನ ಮನೆಯಲ್ಲೇ ಕಾಲ ಕಳೆದು ಬೆಂಬಲ ವ್ಯಕ್ತಪಡಿಸಿದರು.
ಪಟ್ಟಣದ ಕೆಲವು ಖಾಸಗಿ ಆಸ್ಪತ್ರೆಗಳು ಭಾನುವಾರದಿಂದ ವೈದ್ಯಕೀಯ ಸೇವೆ ನೀಡಲು ಪ್ರಾರಂಭಿಸಿವೆ. ಇದರಿಂದ ರೋಗಿಗಳು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಒಂದು ವಾರದಿಂದ ಪ್ರಮುಖ ಖಾಸಗಿ ಆಸ್ಪತ್ರೆಗಳು ಸೀಲ್ಡೌನ್ ಆಗಿದ್ದರಿಂದ ರೋಗಿಗಳಿಗೆ ಸಮಸ್ಯೆಯಾಗಿತ್ತು. ಔಷಧ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.
ಇಂದು ಡಿಸಿಎಂ ನೇತೃತ್ವದಲ್ಲಿ ಸಭೆ: ತಾಲೂಕಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಜನರಲ್ಲಿ ಭೀತಿ ಆವರಿಸಿದೆ. ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯು ಜು. 13ರಂದು ಬೆಳಗ್ಗೆ 10 ಗಂಟೆಗೆ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆಯಲಿದೆ.
ವ್ಯಾಪಾರಸ್ಥರಿಂದ ಬಂದ್: ಪಟ್ಟಣದ ಎಲ್ಲ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಮತ್ತೆ ಜು. 13ರಿಂದ ಜು. 20ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಗ್ರಾಹಕರಿಗೆ ತೊಂದರೆಯಾಗದಿರಲು ಅಗತ್ಯ ದಿನ ಬಳಕೆ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.