ಭಾಲ್ಕಿ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರೊಂದಿಗೆ ಪುರಸಭೆಯ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಲಹೆ ನೀಡಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಪುರಸಭೆಗೆ ಆಯ್ಕೆಯಾದ ಅಧ್ಯಕ್ಷೆ-ಉಪಾಧ್ಯಕ್ಷ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೋರ್ಟ್ ಮಟ್ಟಿಲೇರಿ ಸುಮಾರು ೧೫ ತಿಂಗಳನಿಂದ ನೆನೆಗುದಿಗೆ ಬಿದ್ದಿರುವ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಈಗ ನೆರವೇರಿದ್ದು, ಪುರಸಭೆಗೆ ಅಧ್ಯಕ್ಷೆಯಾಗಿ ಶಶಿಕಲಾ ಅಶೋಕ ಸಿಂಧನಕೇರೆ ಮತ್ತು ಉಪಾಧ್ಯಕ್ಷರಾಗಿ ವಿಜಯಕುಮಾರ ಶರಣಪ್ಪ ರಾಜಭವನ ಅವರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ. ನೂತನ ಅಧ್ಯಕ್ಷ-ಉಪಾಧ್ಯಕ್ಷರ ಸಾರಥ್ಯದಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕಿದೆ. ಎಲ್ಲ ಸದಸ್ಯರು ಸುಂದರ, ಸ್ವಚ್ಛ ಭಾಲ್ಕಿಗಾಗಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರ ಐದು ಗ್ಯಾರೆಂಟಿ ಸೇರಿ ಕೊಟ್ಟ ಮಾತಿನಂತೆ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಮುಂದೆಯೂ ಪಟ್ಟಣದ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗುವುದು. ನೂತನ ಅಧ್ಯಕ್ಷ-ಉಪಾಧ್ಯಕ್ಷರು ಶ್ರಮವಹಿಸಿ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಸಿಪಿಐ ಬಿ.ಅಮರೇಶ ಮತ್ತು ಸದಸ್ಯರು ಇದ್ದರು.