ಹೊಸದುರ್ಗ: ತಾಲೂಕಿನಲ್ಲಿ ಮುಂಗಾರು ಬಿತ್ತನೆ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.
ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ವಿತರಿಸಿ ಮಾತನಾಡಿದರು.
ತಾಲೂಕಿನಲ್ಲಿ ಕಳೆದ ವಾರ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಗರಿಗೆದರಿವೆ. ಇದಕ್ಕೆ ಲಾಕ್ಡೌನ್ನಿಂದ ಯಾವುದೇ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ರಸಗೊಬ್ಬರ, ಕೀಟನಾಶಕ ಮತ್ತು ಕೃಷಿ ಸಂಬಂಧಿ ಉತ್ಪನ್ನಗಳನ್ನು ಮಾರಾಟ ಮಾಡುವ ಆಗ್ರೋ ಕೇಂದ್ರಗಳ ಬಾಗಿಲು ತೆರೆಯುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗೊಬ್ಬರ, ಬೀಜ ಮತ್ತಿತರ ವಸ್ತುಗಳನ್ನು ಖರೀದಿಸಲು ರೈತರಿಗೆ ಅವಕಾಶ ಮಾಡಿಕೊಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪೊಲೀಸ್ ಇಲಾಖೆ ಕೂಡ ರೈತರ ಅಗತ್ಯ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದರು.
ಮುಂಗಾರು ಬಿತ್ತನೆಗೆ ಅವಶ್ಯವಾದ ಹೆಸರು ಕಾಳನ್ನು ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಒಬ್ಬ ರೈತನಿಗೆ ಗರಿಷ್ಠ 30 ಕೆ.ಜಿ.ಬಿತ್ತನೆ ಬೀಜ ನೀಡಲಾಗುವುದು. ಹೋಬಳಿ ಕೇಂದ್ರಗಳ ರೈತ ಸಂಪರ್ಕ ಕೇಂದ್ರಗಳಲ್ಲೂ ಬಿತ್ತನೆ ಬೀಜ ಪಡೆಯಬಹುದು ಎಂದು ತಿಳಿಸಿದರು.