ಹೊಸಪೇಟೆ: ನಗರದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರನ್ನು ನೇರ ವೇತನಕ್ಕೆ ಒಳಪಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಮಾ.21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಗೋಪಾಲ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿದಾಗ ಹೊರಗುತ್ತಿಗೆಯಲ್ಲಿರುವ ವಾಹನ ಚಾಲಕರನ್ನೂ ಕಾಯಂಗೊಳಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಹಲವು ತಿಂಗಳು ಕಳೆದರೂ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೊಸಪೇಟೆ ನಗರಸಭೆಯಲ್ಲಿ 68 ಜನ ವಾಹನ ಚಾಲಕರು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಐದು ಪುರಸಭೆಗಳು ಮತ್ತು ಒಂದು ಪಟ್ಟಣ ಪಂಚಾಯತ್ ಸೇರಿ ಅಂದಾಜು 400ಕ್ಕೂ ಹೆಚ್ಚು ವಾಹನ ಚಾಲಕರು 12,800 ರೂ. ಕನಿಷ್ಠ ವೇತನ ಪಡೆಯುತ್ತ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯ ಸಮಿತಿ ಕರೆ ಮೇರೆಗೆ ಮಾ.20 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ. ಮಾ.21 ರಿಂದ ಸೇವೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದರು. ಸಂಘದ ಪ್ರಮುಖರಾದ ಎಚ್.ಗಂಗಾಧರ, ಕೆ.ರಮೇಶ್, ಪೆನ್ನಯ್ಯ, ಹೊನ್ನೂರಸ್ವಾಮಿ, ಶ್ರೀನಿವಾಸ ಇದ್ದರು.