ರಾಯ್ಪುರ: ಸರ್ಕಾರಿ ಆಸ್ಪತ್ರೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದಾಗಿ ವೈದ್ಯರು ರೋಗಿಗಳಿಗೆ ಮೊಬೈಲ್ ಟಾರ್ಚ್ನ ಬೆಳಕಿನಲ್ಲಿ ಚಿಕಿತ್ಸೆ ನೀಡಿರುವ ಘಟನೆ ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ.
ಕಳೆದ ಐದು ದಿನಗಳಿಂದ ಆಸ್ಪತ್ರೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: VIDEO| ಜೆಎನ್ ಯು ಕ್ಯಾಂಪಸ್ನ ಗೋಡೆಗಳ ಮೇಲೆ ವಿವಾದಾತ್ಮಕ ಬರಹ
ಬೆಳಕಿಗೆ ಬಂದದ್ದು ಹೇಗೆ
ಶುಕ್ರವಾರ ಛತ್ತೀಸ್ಗಢದ ಕಿಲೆಪಾಲ್ ಎಂಬಲ್ಲಿ ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಕೂಡಲೇ ಹತ್ತಿರದಲ್ಲಿದ್ದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಬಂದಾಗ ಅಲ್ಲಿ ವಿದ್ಯುತ್ ಕಡಿತಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಕೂಡಲೇ ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ದಿಮ್ರಪಾಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯುತ್ ಕಡಿತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಗಾಯಾಳುಗಳ ಕುಟುಂಬಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಆಸ್ಪತ್ರೆಯಲ್ಲಿ ಶಾಟ್ ಸರ್ಕ್ಯೂಟ್ ಸಂಭವಿಸಿ ತುಂಬಾ ದಿನಗಳು ಕಳೆಯುತ್ತಾ ಬಂದರೂ ರಿಪೇರಿ ಮಾಡದೇ ಇರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.