ಚಿತ್ರದುರ್ಗ: ಮದುವೆಯಾಗಿ ತುಂಬಾ ವರ್ಷಗಳು ಕಳೆದರೂ ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರು ನೀಡಿದ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಆಶಾ (26) ಎಂದು ಗುರುತಿಸಲಾಗಿದ್ದು ಇವರು ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶ್ರೀರಾಮ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಡುಗಡೆಗೂ ಮುನ್ನ 1000 ಕೋಟಿ ರೂ. ಕಮಾಯಿ ಮಾಡಿದ ಸಿನಿಮಾ; ಇದು ಸಾಧ್ಯವಾಗಿದ್ದು ಹೇಗೆ?
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ ಮದುವೆಯಾಗಿ ಐದು ವರ್ಷಗಳಾದರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಕೆಯ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು. ಇದಲ್ಲದೆ ಆಶಾ ಅವರ ಅತ್ತೆ ಆಕೆಯನ್ನು ಪದೇ ಪದೇ ತವರು ಮನೆಗೆ ವಾಪಸ್ ಕಳಿಸುತ್ತೇನೆ ಎಂದು ಹೇಳುತ್ತಿದ್ದರಂತೆ.
ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತ ಆಶಾ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.