ಎನ್.ಆರ್.ಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ದಿನದಂದು ಚಿಕ್ಕಮಗಳೂರು ತಾಲೂಕಿನ ಮಾಗಡಿಯಿಂದ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯವರೆಗೆ 90 ಸಾವಿರ ಜನ ಸೇರಿ ಮಾನವ ಸರಪಳಿ ರಚಿಸಬೇಕು ಎಂದು ತಾಪಂ ಇಒ ನವೀನ್ ಕುಮಾರ್ ತಿಳಿಸಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಗುತ್ತದೆ. ಶಿಕ್ಷಣ ಇಲಾಖೆಯವರು ಶಾಲಾ ಮಕ್ಕಳನ್ನು ಕರೆ ತರಬೇಕು.ಇದು ಬೃಹತ್ ಕಾರ್ಯಕ್ರಮವಾಗಿದ್ದು, ಇದ್ದಕ್ಕೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದರು.
ಗ್ರಾಪಂ ಮಟ್ಟದಲ್ಲಿ ಪಿಡಿಒ ಅಧ್ಯಕ್ಷರು, ಈ ಕುರಿತು ಸಭೆ ನಡೆಸಿ ಗ್ರಾಪಂ ಸದಸ್ಯರನ್ನು ,ಸಾರ್ವಜನಿಕರನ್ನು ಕರೆತರಬೇಕು. ಮಾನವ ಸರಪಳಿ ರಚಿಸಿ ಸಂವಿಧಾನ ಪೀಠಿಕೆಯನ್ನು ಏಕಕಾಲಕ್ಕೆ ಓದಿ ದಾಖಲೆ ನಿರ್ಮಿಸಲಾಗುತ್ತದೆ. ಶಿಕ್ಷಣ ಇಲಾಖೆಯಿಂದ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಕರೆ ತರಲು ಖಾಸಗಿ ಬಸ್ಗಳಿಗೆ ಜಿಲ್ಲಾಡಳಿತದಿಂದ ಡೀಸೆಲ್ ವ್ಯವಸ್ಥೆ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಇನ್ನೊಂದು ವೀಡಿಯೋ ಕಾನ್ಪರೆನ್ಸ್ ಸಭೆಯನ್ನು ಪಂಚಾಯಿತಿ ಮಟ್ಟದಲ್ಲಿ ಮಾಡಲಾಗುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎ.ಕೆ.ಪಾಟೀಲ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಸಹಕಾರ ಸಂಘದ ಪ್ರತಿನಿಧಿಗಳನ್ನು ಕರೆ ತರಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಈಗಾಗಲೇ ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಲು ಸಂಬಂಧಪಟ್ಟ ಲಿಂಕ್ನ್ನು ಗ್ರಾಪಂಗಳಿಗೆ ಕಳಿಸಿಕೊಡಲಾಗುವುದು. ಕಾರ್ಯಕ್ರಮದಲ್ಲಿ ರಂಗೋಲಿ, ಛದ್ಮವೇಷ ಹಾಗೂ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.
ತಹಸೀಲ್ದಾರ್ ತನುಜ ಮಾತನಾಡಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಸ್ವ ಇಚ್ಛೆಯಿಂದ ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು. ಪಪಂ ಅಧ್ಯಕ್ಷೆ ಸುರೈಯಾಭಾನು, ಉಪಾಧ್ಯಕ್ಷೆ ಉಮಾಕೇಶವ್, ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷ ಸುನೀಲ್, ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ನಿರಂಜನಮೂರ್ತಿ, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ವೆಂಕಟೇಶ್, ಭವಾನಿ ಮತ್ತಿತರರು ಇದ್ದರು.
