ಕಾರವಾರ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷವೊಂದಕ್ಕೆ ಸೇರಲಿದ್ದೇನೆ. ಕಾರ್ಯಕರ್ತರ ಜತೆ ಚರ್ಚಿಸಿ ಯಾವ ಪಕ್ಷಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸುತ್ತೇನೆ ಎಂದರು.
ಲೋಕಸಭೆಗೆ ಈ ಬಾರಿ ಉತ್ತರ ಕನ್ನಡ ಕ್ಷೇತ್ರದಿಂದ ಹಿಂದುಳಿದ ವರ್ಗದವರಿಗೆ ಅವಕಾಶ ನೀಡಬೇಕು ಎಂದರು.
ಕಾರವಾರ ಮತ್ತು ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದೆ. ಇಬ್ಬರೂ ಗೆಲುವು ಸಾಧಿಸಿದ್ದಾರೆ. ಸೈಲ್ ಗೆಲುವು ಕ್ಷೇತ್ರದ ಜನರ ಗೆಲುವಾಗಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗಾಗಿ ಸತೀಶ ಸೈಲ್ ಅವರಿಗೆ ನನ್ನ ಸಹಕಾರ ಇರಲಿದೆ. ಚುನಾವಣೆ ಸಮಯದಲ್ಲಿ ನನ್ನನ್ನು ವೈಯಕ್ತಿಕವಾಗಿ ಟೀಕಿಸುವ ಕೆಲಸ ನಡೆಯಿತು. ಚಾರಿತ್ರ್ಯ ಕುಗ್ಗಿಸುವ ಪ್ರಯತ್ನ ನಡೆಯಿತು ಎಂದರು.