More

    ತಾಳ್ಮೆ ಇದ್ದರೆ ಸಾಧನೆ ಮಾಡಲು ಸಾಧ್ಯ

    ಚಿಕ್ಕಮಗಳೂರು: ಯಾವುದೇ ಸಮಸ್ಯೆಗಳು ಬಂದರೂ ಅವುಗಳನ್ನು ಗಂಭೀರವಾಗಿ ತೆಗೆದುಕೊಂಡು ಸಮಾಧಾನದಿಂದ ಬಗೆಹರಿಸಿಕೊಂಡಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಎಂಇಎಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್ ಹೇಳಿದರು.
    ನಗರದ ಎಂ.ಎಲ್.ಮಂಜಯ್ಯ ಶೆಟ್ಟಿ ನರಸಿಂಹ ಶೆಟ್ಟಿ ಶಿಕ್ಷಕರ ಶಿಕ್ಷಣ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ತಾಳ್ಮೆ ಮುಖ್ಯ. ತಾಳ್ಮೆ ಇದ್ದರೆ ಏನಾದರೂ ಸಾಧನೆ ಮಾಡಬಹುದು ಎಂದರು.
    ವಿದ್ಯಾರ್ಥಿಗಳು ಯಾವಾಗಲೂ ಆಶಾವಾದಿಗಳಾಗಿರಬೇಕು. ಆಗಲೇ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ. ಶಿಕ್ಷಕರು ಸದಾ ಅಧ್ಯಯನಶೀಲರಾಗಿರಬೇಕು. ಆಗಲೇ ಮಕ್ಕಳಿಗೆ ಉತ್ತಮವಾಗಿ ಬೋಧನೆ ಮಾಡಲು ಸಾಧ್ಯ. ಪ್ರಶಿಕ್ಷಣಾರ್ಥಿಗಳು ಈಗಿನಿಂದಲೇ ಉತ್ತಮ ಶಿಕ್ಷಕರಾಗುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.
    ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ದೇಶವನ್ನು ಸರಿಯಾದ ದಾರಿಗೆ ತರವಲ್ಲಿ ಶಿಕ್ಷಕರ ಪಾತ್ರ ಪ್ರಮುಖ. ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದ್ದು, ಇದರ ಆಧಾರದ ಮೇಲೆಯೇ ದೇಶದ ಪ್ರಗತಿ ನಿರ್ಧಾರವಾಗುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts