ವಂಢೀಗಡ: ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಹಿಸ್ಸಾರ್ನಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಿಮಾಂಶು ಎಂದು ತಿಳಿದು ಬಂದಿದೆ. ಮೃತರನ್ನು ಪ್ರತಿಮಾ ದೇವಿ ಎಂದು ಗುರುತಿಸಲಾಗಿದ್ದು, ಆರೋಪಿ ಇವರ ಮೃತದೇಹವನ್ನು ಪ್ರಯಾಗ್ರಾಜ್ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಎಸೆಯಲು ಯತ್ನಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಆರೋಪಿ ಹಿಮಾಂಶು ಐಐಟಿ ಆಕಾಂಕ್ಷಿಯಾಗಿದ್ದು, ತನ್ನ ತಾಯಿಯೊಂದಿಗೆ ಹರಿಯಾಣದ ಹಿಸ್ಸಾರ್ನಲ್ಲಿ ನೆಲೆಸಿದ್ದ. ಆರೋಪಿ ತನ್ನ ತಾಯಿಯ ಬಳಿ 5 ಸಾವಿರ ರೂಪಾಯಿ ಹಣ ಕೇಳಿದ್ದು, ಇದಕ್ಕೆ ಅವರ ತಾಯಿ ಒಪ್ಪಿಲ್ಲ. ಬಳಿಕ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆತ ಸಿಟ್ಟಿನಲ್ಲಿ ಅವರನ್ನು ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿ: ಎಂ.ಎಸ್.ಧೋನಿ ಬಗ್ಗೆ ಅಪಪ್ರಚಾರ; ನಿವೃತ್ತ ಐಪಿಎಸ್ ಅಧಿಕಾರಿಗೆ ಜೈಲುಶಿಕ್ಷೆ
ಹತ್ಯೆ ಮಾಡಿದ ಬಳಿಕ ಆತ ತನ್ನ ತಾಯಿಯ ಮೃತದೇಹವನ್ನು ಸೂಟ್ಕೇಸ್ ಒಂದರಲ್ಲಿ ಪ್ಯಾಕ್ ಮಾಡಿದ್ದು, ಉತ್ತರಪ್ರದೇಶದ ಪ್ರಯಾಗ್ರಾಜ್ಗೆ ಪ್ರಯಾಣ ಬೆಳೆಸಿದ್ದಾನೆ. ಬಳಿಕ ತ್ರಿವೇಣಿ ಸಂಗಮದಲ್ಲಿ ಆರೋಪಿ ಶವವನ್ನು ಮುಳುಗಿಸಲು ಯತ್ನಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸೂಟ್ಕೇಸ್ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.