ಚಿತ್ರದುರ್ಗ: ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಅಂಗೀಕರಿಸಿ, ಕಲಂ 341(3) ಕ್ಕೆ ತಿದ್ದುಪಡಿಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ), ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತ್ಯೇಕವಾಗಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಒಳಮೀಸಲು ಜಾರಿಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನ್ಯಾಯಯುತವಾದ ಬೇಡಿಕೆ ಈಡೇರಿಸಬೇಕು ಎಂದು ಸಿಎಂಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.
ಎಸ್ಸಿ, ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆಗೆ ಅನ್ವಯವಾಗುವಂತೆ ತಿದ್ದುಪಡಿ ಮಾಡಬೇಕು. ಈ ಸಮುದಾಯಗಳ ಅಭಿವೃದ್ಧಿಗಾಗಿ ಎಸ್ಇಸಿಪಿ, ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟಿರುವ ಹಣವನ್ನು ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸುತ್ತಿರುವುದು ಖಂಡನೀಯ. ಅದನ್ನು ಹಿಂಪಡೆಯಲು ರಚಿಸಿಕೊಂಡಿರುವ 7(ಡಿ) ಕಾಯ್ದೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ, ಉದ್ಯೋಗ ಇತರೆ ಸೌಲಭ್ಯ ಕಬಳಿಸಿರುವವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕು. ಸರ್ಕಾರಿ ನೌಕರರ ಎನ್ಪಿಎಸ್ ಯೋಜನೆ ರದ್ದುಗೊಳಿಸಿ ಒಪಿಎಸ್ ಯೋಜನೆ ಮರು ಜಾರಿಗೊಳಿಸಬೇಕು ಎಂದು ಕೋರಿದರು.
ದಸಂಸ ಪದಾಧಿಕಾರಿಗಳಾದ ಕೆಂಗುಂಟೆ ಜಯಪ್ಪ, ಪ್ರಸನ್ನ ಎಂ.ಜಯಣ್ಣ, ರುದ್ರಮುನಿ, ಮುತ್ತುಗದೂರು ಶಿವಣ್ಣ, ಮಂಜಣ್ಣ ವಿಶ್ವನಾಥಹಳ್ಳಿ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳಾದ ಕೆ.ರಾಮಚಂದ್ರ, ವೃಷಭೇಂದ್ರಬಾಬು, ರೇವಣಸಿದ್ದಪ್ಪ, ಸಿದ್ದಪ್ಪ, ಹನುಮಂತು, ಚಂದ್ರಣ್ಣ, ಮಹಮದ್ ರಫಿ, ಶಿವುಕುಮಾರ್ ಇತರರಿದ್ದರು.