ಉಡುಪಿ: ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಯುವಪೀಳಿಗೆ ಸೃಜನಾತ್ಮಕ ಕೌಶಲ್ಯ ಹೊಂದಿದ್ದಾರೆ. ಕೌಶಲ್ಯ ಪ್ರದರ್ಶನಕ್ಕೆ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಸಂಸದ ಶ್ರೀನಿವಾಸ ಪೂಜಾರಿ ಹೇಳಿದರು.
ಬುಧವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕೌಶಲ್ಯ ರೋಜ್ಗಾರ್ ಮೇಳ – (ಉದ್ಯೋಗ ಮೇಳ) ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಹುದ್ದೆಗಳಿಗೆ ಶಿಫಾರಸ್ಸು ಮಾಡಿ, ಕೆಲಸ ದೊರಕಿಸಲು ಸಾಧ್ಯವಿಲ್ಲ. ಹೀಗಾಗಿ ಸ್ವಂತ ಪ್ರತಿಭೆಯಿಂದ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯತೆಯಲ್ಲಿದ್ದೇವೆ. ಉದ್ಯೋಗ ಮೇಳಗಳು ನಿರುದ್ಯೋಗಿಗಳಿಗೆ ಸಹಕಾರಿಯಾಗಿದ್ದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗುವ ಜೊತೆಗೆ ಕುಟುಂಬದ ಆರ್ಥಿಕ ಸಬಲೀಕರಣಕ್ಕೂ ಅನುಕೂಲವಾಗಲಿದೆ ಎಂದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು ಉದ್ಯೋಗ ಪತ್ರ ನೀಡಿದ ಕನಿಷ್ಠ ಹದಿನೈದು ದಿನಗಳ ಒಳಗಾಗಿ ಅಭ್ಯರ್ಥಿಗಳಿಗೆ ಉದ್ಯೋಗ ನೀಡಿದ್ದಲ್ಲಿ ಉದ್ಯೋಗ ಮೇಳಗಳು ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉಡುಪಿ ಜಿಲ್ಲೆಯು ಶಿಕ್ಷಣ ಕಾಶೀ ಎಂದೇ ಹೆಸರುವಾಸಿಯಾಗಿದ್ದು, ಶಿಕ್ಷಣ ಪಡೆದ ವಿದ್ಯಾರ್ಥಿಗಳು ಕೌಶಲ್ಯಗಳಿಂದ ಸ್ವಂತ ಉದ್ಯೋಗಕೈಗೊಂಡು ಜಿಲ್ಲೆಯಲ್ಲಿಯೇ ಬದುಕು ಕಟ್ಟಿಕೊಳ್ಳಬೇಕು. ಮಾ.4ಕ್ಕೆ ನಗರಸಭೆ ವತಿಯಿಂದಲೂ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದ್ದು, ಉದ್ಯೋಗ ದೊರಕುವುದೇ ಕಷ್ಟದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳಗಳ ಆಯೋಜನೆ ಅತ್ಯವಶ್ಯಕವಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆತಂಕಕ್ಕೆ ಒಳಪಡದೇ ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಬೇಕು. ಜೊತೆಗೆ ಸ್ವ-ಉದ್ಯೋಗ ಹೊಂದಲು ಆಸಕ್ತಿ ಇರುವವರಿಗೆ ಸರ್ಕಾರದಿಂದ ಸಾಕಷ್ಟು ಯೋಜನೆಗಳಿದ್ದು, 10 ಲಕ್ಷ ರೂ.ನಿಂದ 3 ಕೋಟಿ ರೂ.ವರೆಗೆ ಸಾಲ ಸೌಲಭ್ಯ ಹಾಗೂ ಸಹಾಯಧನ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೀಕ್ಷಿತ್ ಶೆಟ್ಟಿ ನಿರೂಪಿಸಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಮದಾಸ ಪ್ರಭು ವಂದಿಸಿದರು.
2 ಸಾವಿಕ್ಕೂ ಅಧಿಕ ಮಂದಿ ನೋಂದಣಿ
ಉದ್ಯೋಗ ಮೇಳದಲ್ಲಿ 2000 ಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದು, 40 ಕ್ಕೂ ಹೆಚ್ಚು ಪ್ರತಿಷ್ಠಿತ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಸಂದರ್ಶನ ನಡೆಸಿದರು. ಇದೇ ಸಂದರ್ಭದಲ್ಲಿ 2022&-23 ನೇ ಸಾಲಿನಲ್ಲಿ ಸಿ.ಎಂ.ಕೆ.ಕೆ.ವೈ ಯೋಜನೆಯಡಿ ಸೆಲ್ಫ್ ಎಂಪ್ಲಾಯ್ಮೆಂಟ್ ಟೈಲರ್ ಜಾಬ್ ರೋಲ್ನಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಟೂಲ್ಕಿಟ್ ವಿತರಿಸಲಾಯಿತು.
ವಿವಿಧ ಇಲಾಖೆಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ನಿಗಮವನ್ನು 2016 ರಲ್ಲಿ ಆರಂಭಿಸಲಾಯಿತು. ಆ ಮೂಲಕ 16 ರಿಂದ 35 ವರ್ಷದೊಳಗಿನ ಯುವಕ ಯುವತಿಯರಿಗೆ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ, ಉದ್ಯೋಗ ಅವಕಾಶ ಕಲ್ಪಿಸುವುದು ನಿಗಮದ ಮಹತ್ತರ ಉದ್ದೇಶ.
ಎ. ಶ್ರೀನಿವಾಸರಾವ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ