ರಾಯಚೂರು: ಈ ಹಿಂದೆ ಭಾರತ ಆರ್ಥಿಕವಾಗಿ ದಿವಾಳಿ ಸ್ಥಿತಿಯಲ್ಲಿದ್ದು, ಈಗ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 130 ಕೋಟಿ ಜನರ ರಕ್ಷಣೆಗೆ ನಿಂತು ಉಚಿತ ಲಸಿಕೆ ಒದಗಿಸಿದರು. ಅನೇಕ ದೇಶಗಳು ಭಾರತವನ್ನು ನೋಡುವಂತೆ ಮಾಡಿದ್ದೇವೆ ಎಂದು ತಿಳಿಸಿದರು.
ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಕೃಷ್ಣಾ ಮತ್ತು ತುಂಗಭದ್ರಾ ನದಿಯಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆ ಮೂಲಕ ಕೃಷಿ ಜಮೀನಿಗೆ ನೀರು, 18 ಹಳ್ಳಿಗಳಿಗೆ ಕೆರೆ ತುಂಬುವ ಯೋಜನೆ ಜಾರಿಗೊಳಿಸಲಾಗಿದೆ. ಈ ಭಾಗದಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದ್ದು, ಏಮ್ಸ್ ಸ್ಥಾಪನೆಗೆ ಒತ್ತು ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕು ಎಂದು ಹೇಳಿದರು.