ನವದೆಹಲಿ: ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ತವರಿಗೆ ಕರೆತರಲು ಕೇಂದ್ರ ಸರ್ಕಾರ ಬುಧವಾರ (ಅ.11) ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿರುವುದಾಗಿ ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ. ಸ್ಥಳದಲ್ಲಿ ವಿಶೇಷ ವಿಮಾನಗಳು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ನಿನ್ನೆ (ಅ.11) ರಾತ್ರಿ ಟ್ವೀಟ್ ಮಾಡಿರುವ ಜೈಶಂಕರ್, ಇಸ್ರೇಲ್ನಲ್ಲಿ ಸಿಲುಕಿರುವ ನಮ್ಮವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದ್ದೇವೆ. ವಿಶೇಷ ವಿಮಾನಗಳು ಮತ್ತು ಅಗತ್ಯವಾಗಿ ಬೇಕಾದಂತಹ ಎಲ್ಲ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಒಳಿತಿಗಾಗಿ ನಾವು ಬದ್ಧರಾಗಿದ್ದೇವೆ ಎಂದು ಜೈಶಂಕರ್ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
Launching #OperationAjay to facilitate the return from Israel of our citizens who wish to return.
Special charter flights and other arrangements being put in place.
Fully committed to the safety and well-being of our nationals abroad.
— Dr. S. Jaishankar (@DrSJaishankar) October 11, 2023
20 ಸಾವಿರಕ್ಕೂ ಅಧಿಕ ಭಾರತೀಯರು
ಪ್ಯಾಲೆಸ್ತೀನ್ನ ಹಮಾಸ್ ಉಗ್ರರು ಅ.7ರ ಶನಿವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ ಬಳಿಕ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಶುರವಾಗಿದೆ. ಸದ್ಯ ಇಸ್ರೇಲ್ನಲ್ಲಿ 20 ಸಾವಿರಕ್ಕೂ ಅಧಿಕ ಭಾರತೀಯರು ವಾಸವಿದ್ದಾರೆ. ಆದರೆ, ಇಸ್ರೇಲ್ನಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂದು ನಿಖರವಾಗಿ ಗೊತ್ತಿಲ್ಲ ಎಂದು ಮುಂಬೈನಲ್ಲಿರುವ ಇಸ್ರೇಲ್ ಕಾನ್ಸುಲ್ ಜನರಲ್ ಕೊಬ್ಬಿ ಶೊಶಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೇರಳ ಸಿಎಂ ಪತ್ರ
ತಮ್ಮ ರಾಜ್ಯದಿಂದ ಸುಮಾರು 7 ಸಾವಿರ ಮಂದಿ ಇಸ್ರೇಲ್ನಲ್ಲಿ ಸಿಲುಕಿದ್ದು, ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಅವರ ಸುರಕ್ಷತೆಯನ್ನು ಖಚಿತಪಡಿಸಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಅ.10) ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.
ನಮ್ಮ ರಾಜ್ಯದ 84ಕ್ಕೂ ಅಧಿಕ ಮಂದಿ ಇಸ್ರೇಲ್ನಲ್ಲಿ ಸಿಲುಕಿದ್ದಾರೆ ಎಂದು ತಮಿಳುನಾಡು ಸಹ ಹೇಳಿಕೆ ನೀಡಿದೆ. ಸಿಲುಕಿರುವ ಎಲ್ಲರು ವಿದ್ಯಾಭ್ಯಾಸ, ಉದ್ಯಮ ಮತ್ತು ಪ್ರವಾಸದ ಉದ್ದೇಶದಿಂದ ಇಸ್ರೇಲ್ಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾಲಿವುಡ್ ನಟಿ ನುಶ್ರತ್ ಭರುಚ್ಚ ಅವರು ಇಸ್ರೇಲ್ನಲ್ಲಿ ಸಿಲುಕಿದ ಬಳಿಕ ಅಕ್ಟೋಬರ್ 8 ರಂದು ಮುಂಬೈಗೆ ಸುರಕ್ಷಿತವಾಗಿ ಹಿಂತಿರುಗಿದರು. ಯುದ್ಧ ಪ್ರಾರಂಭವಾದಾಗ ಅವರು ಹೈಫಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಹಲವು ಸಮಯಗಳವರೆಗೆ ಅವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅಂತಿಮವಾಗಿ ಅವರೇ ಸಂಪರ್ಕಿಸಿ ಸುರಕ್ಷಿತವಾಗಿ ಇರುವುದಾಗಿ ತಿಳಿಸಿ, ಇಸ್ರೇಲ್ ವಿಮಾನ ನಿಲ್ದಾಣವನ್ನು ತಲುಪಿ ಭಾರತಕ್ಕೆ ವಾಪಸ್ಸಾದರು.
ಭಾರತೀಯರಿಗೆ ಸಹಾಯವಾಣಿ
ಇಸ್ರೇಲ್ – ಹಮಾಸ್ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ನೆರವು ನೀಡಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ 24 ಗಂಟೆಗಳ ಸಹಾಯ ವಾಣಿ ಸ್ಥಾಪಿಸಿದೆ. 1800118797 (ಟೋಲ್ ಫ್ರೀ), +91-11 23012113, +91-11-23014104, +91-11-23017905 ಮತ್ತು +919968291988ಗೆ ಸಂಪರ್ಕ ಮಾಡಬಹುದು. ಅಥವಾ room.gov.gov ಗೆ ಇ ಮೇಲ್ ಮಾಡಬಹುದು. ಟೆಲ್ ಅವಿವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹ 24 ಗಂಟೆಗಳ ಸಹಾಯವಾಣಿ ಸ್ಥಾಪಿಸಿದೆ. ಅಗತ್ಯ ಇರುವವರು +972- 35226748, +972-543278392ಗೆ ಸಂರ್ಪಸಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್- ಪ್ಯಾಲೆಸ್ತೀನ್ ವಿವಾದವೇನು?
ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.
ಗಾಜಾ ಪಟ್ಟಿ ಎಂದರೇನು? : ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ. (ಏಜೆನ್ಸೀಸ್)
ಕಾಫಿಯಲ್ಲಿ ತೆಂಗಿನೆಣ್ಣೆ ಬೆರೆಸಿ ಸೇವಿಸಿದರೆ ಇಷ್ಟೆಲ್ಲಾ ಲಾಭಗಳಿವೆಯಾ? ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ….