ಬೆಳಗಾವಿ: ಭಾರತೀಯರು ಎಂದರೆ ಹಾವು ಆಡಿಸುವರು, ಪುಂಗಿ ಊದುವವರು ಎಂದು ಟೀಕೆ ಮಾಡುತ್ತಿದ್ದ ಅಮೆರಿಕಾದಲ್ಲಿ ಇದೀಗ ಆರೋಗ್ಯ, ಇಂಜಿನಿಯರಿಂಗ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಶೇ. 40ರಷ್ಟು ಭಾರತೀಯರೇ ಇದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ
ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಪಿಯು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ನಿಮಿತ್ತ ರಾಷ್ಟ್ರೀಯ ಯುವ ಸಪ್ತಾಹ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮುಂದುವರಿದ ಅಮೆರಿಕಾದಲ್ಲಿ ಶೇ. 36 ಹಾಗೂ ಶೇ.18 ರಷ್ಟು ವೈದ್ಯಕೀಯ ಕ್ಷೇತ್ರದಲ್ಲಿ ಭಾರತೀಯರು ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ಬೇರೆ ದೇಶದವರು ಭಾರತೀಯರನ್ನು ನೋಡುವ ದೃಷ್ಟಿ ಬದಲಾಗಿದ್ದು, ಗೌರವಿಸುವ ಕೆಲಸ ಮಾಡುತ್ತಿದ್ದಾರೆ. ಜಗತ್ತಿನ ವಿವಿಧ ದೇಶಗಳಲ್ಲಿ ಭಾರತೀಯರು ಎಲ್ಲ ಕ್ಷೇತ್ರಗಳಲ್ಲಿ ಹಿಡಿತ ಸಾಧಿಸಿದ್ದಾರೆ. ಹಾಗಾಗಿಯೇ ಭಾರತೀಯರನ್ನು ಯಾರೂ ಟೀಕೆ, ಟಿಪ್ಪಣೆ ಮಾಡಲು ಹೋಗುತ್ತಿಲ್ಲ ಎಂದರು.
ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ಶಿಕ್ಷಕರು ರಾಷ್ಟ್ರೀಯತೆ, ಕಲೆ, ಸಂಸ್ಕೃತಿ, ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದೆ. ಸರ್ಕಾರ ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಮೋಕ್ಷಾತ್ಮಾನಂದ ಮಹಾರಾಜರು ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿಯೇ ಸ್ವಾಮಿ ವಿವೇಕಾನಂದರ ತತ್ತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು. ಕಲಿಕೆಯ ಮೂಲಕ ಸಮಾಜವನ್ನು ಜಾಗೃತಿಗೊಳಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಅಪರ ಜಿಲ್ಲಾಧಿಕಾರಿ ಅಶೋಕ ಗುಡಗುಂಟಿ,
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ. ಸಿ.ಈಶ್ವರಚಂದ್ರ, ಪಾಲಿಕೆಯ ಉಪ ಆಯುಕ್ತ ದೊಡಗೌಡರ ಇದ್ದರು.