ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಅಧಿಕಾರಿ, ನೌಕರರಿಗೆ ಬಡ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಅ.12 ರಂದು ಗ್ರೂಪ್ ಆ್ ಮಿನಿಸ್ಟರ್ಸ್ ಸಭೆ ನಡೆಯಲಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಸಚಿವರು ಈ ಸಭೆಯಲ್ಲಿ ಭಾಗವಹಿಸಿ ಪರಿಶಿಷ್ಟ ನೌಕರರ ಬೇಡಿಕೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ.ಚಂದ್ರಶೇಖರಯ್ಯ ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಚಿವರ ಜತೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು ಇಲಾಖೆ ಕಾರ್ಯದರ್ಶಿಗಳು, ಅಡ್ವೋಕೇಟ್ ಜನರಲ್ ಮತ್ತಿತರ ಉನ್ನತಾಧಿಕಾರಿಗಳೂ ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರ ಬಡ್ತಿ ಮೀಸಲಾತಿ ಆದೇಶ, ಬ್ಯಾಕ್ಲಾಗ್ ಹುದ್ದೆ ತುಂಬುವ ಆದೇಶ ತಿದ್ದುಪಡಿ, ಜೇಷ್ಠತೆ ಸಂರಕ್ಷಣಾ ಕಾಯ್ದೆ, ಸರ್ವೋಚ್ಚ ನ್ಯಾಯಾಲಯದ ತೀರ್ಪು ಹಾಗೂ ಮೀಸಲಾತಿ ಹೆಚ್ಚಳದ ಆದೇಶಗಳನ್ನು ಜಾರಿ ಮಾಡದೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಧಿಕಾರಿ, ನೌಕರರಿಗೆ ಬಡ್ತಿಯಲ್ಲಿ ವಂಚನೆ ಮಾಡುತ್ತಿರುವ ಕುರಿತು ಸಂಘ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಮಂತ್ರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ತಮಗೆ ಸರ್ಕಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಡುತ್ತಿದೆ.
ಸಮಸ್ಯೆಗಳ ಪರಿಹಾರಕ್ಕೆ ಪರಾಮರ್ಶೆ:
ಅ.12 ರಂದು ಎಲ್ಲ ಸಚಿವರು ಸೇರಿ ಸಂಘದ ಬೇಡಿಕೆಗಳನ್ನು ಪರಾಮರ್ಶಿಸಿ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲಿದ್ದಾರೆ. ಸಂಘದ ಅಧ್ಯಕ್ಷ ಡಿ.ಚಂದ್ರಶೇಖರಯ್ಯ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ತಮ್ಮ
ಸಮಸ್ಯೆಗಳು, ತಮಗೆ ಆಗುತ್ತಿರುವ ವಂಚನೆ ಬಗ್ಗೆ ಸಮಗ್ರ ಮಾಹಿತಿ ನೀಡಿತು.
ಸಚಿವರಿಂದ ಸಕಾರಾತ್ಮಕ ಸ್ಪಂದನೆ
ಸಂಘದ ಬೇಡಿಕೆಗಳನ್ನು ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾನೂನು ವ್ಯಾಪ್ತಿಯಲ್ಲಿ ನಿಮಗೆ ನಿಶ್ಚಿತಾಗಿಯೂ ನ್ಯಾಯ ದೊರಕಿಸಿಕೊಡುತ್ತೇವೆ. ಅಲ್ಲದೆ, ಅನ್ಯಾಯ ಎಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೂಡ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.