ಯಾದಗಿರಿ: ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಂದ ಯಾದಗಿರಿಗೆ ಮರಳುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಸಂಬಂಧ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸುತ್ತಿರುವ ಆರೋಗ್ಯ ತಪಾಸಣೆ ಕಾರ್ಯವನ್ನು ಜಿಪಂ ಸಿಇಒ ಶಿಲ್ಪಾ ಶರ್ಮಾ ಮಂಗಳವಾರ ಮಧ್ಯರಾತ್ರಿ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದರು.
ಬೆಂಗಳೂರು ಮತ್ತು ರಾಜ್ಯದ ಇತರೆ ಜಿಲ್ಲೆಗಳಿಂದ ಬಸ್ಗಳ ಮೂಲಕ ಆಗಮಿಸುತ್ತಿರುವ ಪ್ರತಿಯೊಬ್ಬ ಕಾರ್ಮಿಕರನ್ನೂ ತಪಾಸಣೆ ನಡೆಸಬೇಕು. ತಪಾಸಣೆಗೆ ಒಳಪಡುವ ಪ್ರತಿಯೊಬ್ಬರ ವಿಳಾಸ ಮತ್ತು ವಿವರಗಳನ್ನು ರಿಜಿಸ್ಟರ್ನಲ್ಲಿ ನಮೂದಿಸಬೇಕು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗವಾಗಿರುವುದರಿಂದ ಸಾಮಾಜಿಕ ಅಂತರ ಕಾಪಾಡುವುದನ್ನು ಮರೆಯಬಾರದು. ಮುಖಕ್ಕೆ ಮಾಸ್ಕ್ಗಳನ್ನು ಧರಿಸಿಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಮಿಕರ ತಪಾಸಣೆ ನಡೆಸಲು ಸೂಚಿಸಿದರು.
ಕಾರ್ಮಿಕರು ತಮ್ಮ ಸ್ವಗ್ರಾಮಕ್ಕೆ ತೆರಳಿದ ನಂತರ ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಮತ್ತು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಲು ಸೂಚಿಸಬೇಕು. ಈ ಅವಧಿಯಲ್ಲಿ ಅವರಿಗೆ ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಮ್ಮ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತ ಕಂಟ್ರೋಲ್ ರೂಮ್ ಸಂಖ್ಯೆ:08473 253950 ಸಂಪರ್ಕಿಸಲು ತಿಳಿಸುವಂತೆ ಸಲಹೆ ನೀಡಿದರು.
ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಚನ್ನಬಸವ, ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್ ಸೇರಿದಂತೆ ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು