ಮೈಸೂರು: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮನೋರಂಜನ್ ಮನೆಗೆ ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೋರಂಜನ್ ಕುಟುಂಬಸ್ಥರಿಂದ ಗುಪ್ತಚರ ಇಲಾಖೆ ಅಧಿಕಾರಿಗಳು ಸಾಕಷ್ಟು ಮಾಹಿತಿ ಕಲೆ ಹಾಕಿದರು. ಕೇಂದ್ರ ಗುಪ್ತಚರ ಇಲಾಖೆ ಮೈಸೂರು ವಿಭಾಗದ ಉಪ ನಿರ್ದೇಶ ಪ್ರವೀಣ್ ನೇತೃತ್ವದಲ್ಲಿ ಮಾಹಿತಿ ಸಂಗ್ರಹಣೆ ಮಾಡಲಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮನೆಯಲ್ಲಿ ತಪಾಸಣೆ ನಡೆಸಲಾಯಿತು.
ಇದನ್ನೂ ಓದಿ: ರಾಜಭವನಕ್ಕೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಮಾತು ಕೇಳಿ ದಂಗಾದ ಪೊಲೀಸರು
ಮನೋರಂಜನ ಪೂರ್ವಪರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸಿದರು. ಮನೋರಂಜನ್ ಕೊಠಡಿಯನ್ನು ಪೊಲೀಸರು ಸಂಪೂರ್ಣ ಶೋಧಿಸಿದರು. ಅರೋಪಿ ಮನೋರಂಜನ್ ನಿವಾಸದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅ ಮೂಲಕ ಮನೋರಂಜನ್ ನಿವಾಸದ ಮೇಲೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.
ಸಂಸತ್ ದಾಳಿಯ ಮತ್ತೊಬ್ಬ ಆರೋಪಿ ಸಾಗರ್ ಶರ್ಮಾ ಮೈಸೂರಿಗೆ ಭೇಟಿ ನೀಡಿದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ. ಸಾಗರ್ ಶರ್ಮ ಮೇ ತಿಂಗಳಿನಲ್ಲಿ ಮೈಸೂರಿಗೆ ಆಗಮಿಸಿದ್ದ. ಆತನ ಭೇಟಿಯ ಉದ್ದೇಶದ ಕುರಿತು ಗುಪ್ತಚರ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.