ನವದೆಹಲಿ: ಸಂಸತ್ ಕಲಾಪದ ವೇಳೆ ಲೋಕಸಭೆಯಲ್ಲಿ ಆದ ಭದ್ರತಾ ಲೋಪದ ವಿಚಾರವನ್ನು ಖಂಡಿಸುವ ಬದಲು ರಾಹುಲ್ ಗಾಂಧಿ ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಬಿಜೆಪಿ ಕಿಡಿಕಾರಿದೆ.
ಭದ್ರತಾ ಲೋಪಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳಿಂದ ಸೃಷ್ಟಿಯಾಗಿರುವ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ.
ಇದನ್ನೂ ಓದಿ: ಮದುವೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು
ಈ ಕುರಿತು ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ರಾಹುಲ್ ಗಾಂಧಿ ಸಂವೇದನಾಶೀಲತೆಯಿಂದ ಮಾತನಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ, ಇಷ್ಟು ದೊಡ್ಡ ಸೋಲಿನ ಬಳಿಕವೂ ಅವರು ಎಲ್ಲಾ ವಿಚಾರವನ್ನು ರಾಜಕೀಯಗೊಳಿಸುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಎಲ್ಲರೂ ಒಟ್ಟಾಗಿ ಖಂಡಿಸರುವ ವಿಚಾರವಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸರ್ವಪಕ್ಷ ಸಭೆ ಕರೆದಿರುವುದನ್ನು ಗಮನಿಸಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಬೇಕೆ ಹೊರತು ಈ ರೀತಿ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.