ಹುಬ್ಬಳ್ಳಿ: ಕಾಂಗ್ರೆಸ್ ನಾಯಕತ್ವ ದುರ್ಬಲವಾಗಿದೆ, ಸಿದ್ದರಾಮಯ್ಯ ದುರ್ಬಲ ನಾಯಕ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಬಿ.ಎಸ್.ಯಡಿಯೂರಪ್ಪನವರು ದುರ್ಬಲ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ ಹಲವು ದಿನಗಳೇ ಕಳೆದರೂ ಆ ಸ್ಥಾನಕ್ಕೆ ಸೂಕ್ತರನ್ನು ನೇಮಕ ಮಾಡುವ ಶಕ್ತಿ ಕಾಂಗ್ರೆಸ್ಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಮೊದಲು ತನ್ನ ದೌರ್ಬಲ್ಯ ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.
ಸಚಿವ ಸಂಪುಟದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಸಂಪುಟ ವಿಸ್ತರಣೆಯಾಗಿದೆ. ಖಾತೆ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಟ್ಟ ವಿಚಾರ ಎಂದರು.
ಹೊರಟ್ಟಿಗೆ ಬಹಿರಂಗ ಆಹ್ವಾನ
ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿಯವರಿಗೆ ಬಿಜೆಪಿಗೆ ಬರುವಂತೆ ಜಗದೀಶ್ ಶೆಟ್ಟರ್ ಬಹಿರಂಗವಾಗಿ ಆಹ್ವಾನ ನೀಡಿದರು.
ಇಬ್ಬರೂ ನಾಯಕರು ಹುಬ್ಬಳ್ಳಿಯ ಖಾಸಗಿ ಹೋಟೆಲ್ಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ನನಗೆ ಇದುವರೆಗೂ ಬಿಜೆಪಿಯಿಂದ ಯಾರೂ ಆಹ್ವಾನ ನೀಡಿಲ್ಲ ಎಂದರು.
ಪಕ್ಕದಲ್ಲಿಯೇ ನಿಂತಿದ್ದ ಜಗದೀಶ್ ಶೆಟ್ಟರ್ ಅವರು ಅದಕ್ಕೆ ಪ್ರತಿಕ್ರಿಯೆ ನೀಡುತ್ತ, ಹೊರಟ್ಟಿಯವರು ಹಿರಿಯ ರಾಜಕಾರಣಿ. ಅವರೇ ಒಪ್ಪಿ ಬಿಜೆಪಿಗೆ ಬರುವುದಾದರೆ ಖಂಡಿತ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಆದರೆ ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ, ಮುಂದೆ ನೋಡೋಣ ಎಂದು ಹೊರಟ್ಟಿ ಹೇಳಿದರು. (ದಿಗ್ವಿಜಯ ನ್ಯೂಸ್)