ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ತಿರುಚಿ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಫ್ಯಾಕ್ಟರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತೆಯರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ ಕಾಂಗ್ರೆಸ್ ಸರ್ಕಾರ ಹಾಗೂ ನಾಯಕರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಿರುಚಿ ಮಹಿಳೆಯರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ತೇಜೋವಧೆಗೆ ಮುಂದಾಗಿರುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಎಚ್ಡಿಕೆ ವಿರುದ್ಧ ಮಹಿಳೆಯರನ್ನು ಎತ್ತಿ ಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕುಮಾರಸ್ವಾಮಿ ಮಹಿಳೆಯರನ್ನು ನಿಂದಿಸಿಲ್ಲ. ಕಾಂಗ್ರೆಸ್ ಪಕ್ಷ ವಾಸ್ತವ ಸ್ಥಿತಿ ತಿರುಚುವ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್ನ ಇಂತಹ ನೀಚ ಕೃತ್ಯದ ಬಗ್ಗೆ ಮಹಿಳೆಯರು ಎಚ್ಚರದಿಂದಿರಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ನಾಗಮ್ಮ ಇತರರಿದ್ದರು.