ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ(ಎಸ್ಐಟಿ)ಕ್ಕೆ ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡಬೇಕೆಂದು ಕೋರ್ ಕಮಿಟಿಯಲ್ಲಿ ನಿರ್ಧರಿಸಿದ್ದೇವೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಟಿ ರಚನೆಯನ್ನು ಸ್ವಾಗತಿಸುತ್ತೇವೆ ಎಂದರು.
ರಾಜ್ಯದಲ್ಲಿ ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಾಕಿ ಉಳಿದಿರುವ 14 ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಯಾವ ರೀತಿ ಒಟ್ಟಾಗಿ ಕೆಲಸ ಮಾಡಬೇಕು ಎಂಬುದರ ಕುರಿತು ಕೋರ್ ಕಮಿಟಿಯಲ್ಲಿ ಚರ್ಚೆ ನಡೆಸಿದ್ದೇವೆ. ಕುಂದುಕೊರತೆಗಳನ್ನು ನಿವಾರಿಸಿಕೊಂಡು ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದರು.
ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಬೇಕು ಎಂಬುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಗುರಿಯಾಗಿದೆ. ಅದಕ್ಕಾಗಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಪ್ರಮುಖರಾದ ಸಾ.ರಾ. ಮಹೇಶ್, ಪಿ.ವಿ. ಚಂದ್ರಶೇಖರ, ಬಂಡೆಪ್ಪ ಖಾಶೆಂಪುರ, ಹನುಮಂತಪ್ಪ ಆಲ್ಕೋಡ್, ರಾಜಾ ವೆಂಕಟಪ್ಪ ನಾಯಕ, ನೇಮಿರಾಜ, ದೊಡ್ಡಪ್ಪಗೌಡ ನರಿಬೋಳ, ವಿರಭದ್ರಪ್ಪ ಹಾಲಹರವಿ, ಇತರರು ಪಾಲ್ಗೊಂಡಿದ್ದರು.