ಬೆಂಗಳೂರು:
ಜೆಡಿಎಸ್ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆಯನ್ನು ಅ.19ರಂದು ಬೆಳಿಗ್ಗೆ 10.30 ಗಂಟೆಗೆ ಜೆ.ಪಿ.ಭವನದಲ್ಲಿ ಕರೆಯಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಶಾಸಕರು, ಮಾಜಿ ಸಚಿವರು ಮತ್ತು ಮಾಜಿ ಸಚಿವರನ್ನೊಳಗೊಂಡ 22 ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಹಾಜರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ರಾಜಕೀಯ ವಿಷಯಗಳು ಚರ್ಚೆಗೆ ಬರಲಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬರ ನಿರ್ವಹಣೆಯಲ್ಲಿ ಸರ್ಕಾರದ ವೈಪಲ್ಯವನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸುವುದು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಸಲಾಗುವುದು ಎಂದು ಪಕ್ಷದ ಪ್ರಮುಖ ಮುಖಂಡರೊಬ್ಬರು ತಿಳಿಸಿದ್ದಾರೆ.
ಇಬ್ರಾಹಿಂ ವಿಷಯ ಪ್ರಸ್ತಾಪ:
ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಬೇಕೆಂಬ ಒತ್ತಡಗಳು ಹೆಚ್ಚಿರುವುದರಿಂದ ಈ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅರಮನೆ ಆವರಣದಲ್ಲಿ ದೇವೇಗೌಡರೇ ಕರೆದಿದ್ದ ಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ವಿಷಯವನ್ನು ದೇವೇಗೌಡರು ಪ್ರಸ್ತಾಪಿಸಿ ಮಾತನಾಡಿದ್ದಾರೆ. ಆಗ ಇಬ್ರಾಹಿಂ ಕೂಡ ಹಾಜರಿದ್ದು ಸಮ್ಮತಿ ವ್ಯಕ್ತಪಡಿಸಿದ್ದರು. ಈಗ ತದ್ವಿರುದ್ದವಾಗಿ ಹೇಳಿಕೆ ಕೊಡುವ ಮೂಲಕ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಕ್ರಮ ಜರುಗಿಸುವುದು ಸೂಕ್ತ ಎನ್ನುವುದು ಪಕ್ಷದ ಅಭಿಮತ ಎಂದು ಮೂಲಗಳು ತಿಳಿಸಿವೆ.