ನವದೆಹಲಿ: ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಜತೆ ಚರ್ಚೆ ನಡೆಸಿದ್ದಾರೆ.
ವಿವಿ ಆವರಣದಲ್ಲಿ ಮುಸುಕುಧಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಒಂದು ದಿನದ ನಂತರ ಅವರು ಬೈಜಾಲ್ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ವಿವಿಯಲ್ಲಿ ನಡೆಯುತ್ತಿರುವ ಗಲಭೆ ತಡೆಯಲು ಜೆಎನ್ಯು ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಸಭೆ ನಡೆಸುವಂತೆ ಇದೇ ವೇಳೆ ಗೃಹ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ ಅವರು ದೆಹಲಿ ಪೊಲೀಸ್ ಮುಖ್ಯಸ್ಥ ಅಮೂಲ್ಯ ಪಟ್ನಾಯಕ್ ಅವರ ಜತೆ ಕೂಡ ಚರ್ಚೆ ನಡೆಸಿದ್ದಾರೆ.
ಜೆಎನ್ಯುವ ಆವರಣದಲ್ಲಿ ಭಾನುವಾರ ರಾತ್ರಿ ಹಿಂಸಾಚಾರ ನಡೆದು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೇರಿದಂತೆ 28 ಮಂದಿ ಗಾಯಗೊಂಡಿದ್ದಾರೆ. (ಏಜೆಸ್ಸೀಸ್)