ಬೆಳಗಾವಿ: ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ವೇಗ ನೀಡಬೇಕು. ಜೂನ್ ಅಂತ್ಯದೊಳಗಾಗಿ ಅದನ್ನು ಪೂರ್ಣಗೊಳಿಸಬೇಕು ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ 9 ಹೊಸ ಬಸ್ಗಳ ಕಾರ್ಯಾಚರಣೆಗೆ ಚಾಲನೆ ನೀಡಿದ ನಂತರ, ಬಸ್ ನಿಲ್ದಾಣ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.
2019 ರ ನವೆಂಬರ್ ಒಳಗಾಗಿಯೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು. ಆದರೆ, ಈವರೆಗೆ ಶೇ.60 ಕೆಲಸವಾಗಿದೆ. ಏಕೆ ವಿಳಂಬ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ಮಾತನಾಡಿ, ಪ್ರತಿ ಸಲ ನಿಲ್ದಾಣಕ್ಕೆ ಬಂದಾಗ, ಶೀಘ್ರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎನ್ನುತ್ತೀರಿ. ಹೊಸ ಬಸ್ ನಿಲ್ದಾಣ ಲೋಕಾರ್ಪಣೆಗೆ ಇನ್ನೆಷ್ಟು ತಿಂಗಳಾದರೂಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಏಕಕಾಲಕ್ಕೆ ಕೇಂದ್ರ ಮತ್ತು ನಗರ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಿಳಂಬವಾಗಿತ್ತು. ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕೆಲಸ ಚುರುಕುಗೊಳಿಸಲಾಗುವುದು ಎಂದು ಗುತ್ತಿಗೆದಾರರು ಮಾಹಿತಿ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಮಹೇಶ ಕುಮಠಳ್ಳಿ, ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಎಂಎಲ್ಸಿ ಮಹಾಂತೇಶ ಕವಟಗಿಮಠ, ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ
ಎಂ.ಆರ್.ಮುಂಜಿ ಇತರರು ಉಪಸ್ಥಿತರಿದ್ದರು.
ಸುವರ್ಣ ವಿಧಾನಸೌಧಕ್ಕೆ ಪ್ರಯಾಣ
ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಜೈವಿಕ ಇಂಧನ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಕೇಂದ್ರ ಬಸ್ ನಿಲ್ದಾಣದಿಂದ ಸಾರಿಗೆ ಸಂಸ್ಥೆಯ ಬಸ್ನಲ್ಲೇ ಸಚಿವರು, ಶಾಸಕರು ಮತ್ತು ರಾಜಕೀಯ ಮುಖಂಡರು ಪ್ರಯಾಣಿಸಿದ್ದು ವಿಶೇಷವಾಗಿತ್ತು.