ತುಮಕೂರು: ಸಮಾಜದಲ್ಲಿ ಶೋಷಣೆಗೊಳಗಾತ್ತಿರುವ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಕಾನೂನು ಅತ್ಯವಶ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್ ಹೇಳಿದರು.
ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ -1098 ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು, ಮಕ್ಕಳ ರಕ್ಷಣೆ ಹಾಗೂ ಶಿಕ್ಷಣದ ಬಗ್ಗೆ ಪ್ರತಿಯೊಬ್ಬರು ಯೋಚಿಸಬೇಕು. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಹೆಣ್ಣಿನ ರಕ್ಷಣೆಗೆ ಆಧುನಿಕ ಯುಗದಲ್ಲಿ ಕಾನೂನು ಅನಿವಾರ್ಯ. ಹಾಗಾಗಿ ಎಲ್ಲರೂ ಕಾನೂನನ್ನು ಅರಿತುಕೊಳ್ಳಬೇಕು ಎಂದರು.
ದಕ್ಷಿಣ ಭಾರತ ಭಾಗದಲ್ಲಿ ಬಾಲ್ಯವಿವಾಹ ಕಡಿಮೆಯಾಗಿದೆ. ಉತ್ತರ ಭಾರತದ ಕೆಲವೊಂದು ಪ್ರದೇಶಗಳಲ್ಲಿ ಇನ್ನೂ ಬಾಲ್ಯವಿವಾಹ ಜಾರಿಯಲ್ಲಿ. ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಹಾಗಾಗಿ ಬಾಲ್ಯ ವಿವಾಹ ಕಂಡುಬಂದಲ್ಲಿ ಯಾರೂ ಬೇಕಾದರೂ ಹತ್ತಿರದ ಪೊಲೀಸ್ ಠಾಣೆ ಅಥವಾ ತಾಲೂಕಿನ ಪ್ರಥಮ ನ್ಯಾಯಿಕ ದಂಡಾಧಿಕಾರಿ ಅವರಿಗೆ ದೂರು ನೀಡಬಹುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಗಾಯತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಧರ್, ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಎಂ.ರಮೇಶ್, ಕ್ಷೇೀತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ, ಜಿಲ್ಲಾ ಬಾಲಭವನದ ಸದಸ್ಯ ನರಸಿಂಹಮೂರ್ತಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ಮಹಿಮಾ, ಕಾರ್ಯಕ್ರಮ ಸಂಯೋಜಕಿ ಮಮತಾ ಉಪಸ್ಥಿತರಿದ್ದರು.
ಭ್ರೂಣ ಹತ್ಯೆ ಇನ್ನೂ ನಿಂತಿಲ್ಲ: ಒಂದು ವರ್ಷದಲ್ಲಿ ಸುಮಾರು ಒಂದು ಲಕ್ಷ ಹೆಣ್ಣು ಮಕ್ಕಳು ತಾಯಿಯ ಗರ್ಭದಲ್ಲಿಯೇ ಸಾವನ್ನಪ್ಪುತ್ತಿವೆ. ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಇನ್ನೂ ನಿಂತಿಲ್ಲ. ಈ ಭೂಮಿ ಮೇಲೆ ಹೆಣ್ಣಾಗಿ ಹುಟ್ಟಿರುವರು ಉನ್ನತ ಶಿಕ್ಷಣ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಜಿಪಂ ಸಿಇಒ ಶುಭಾಕಲ್ಯಾಣ್ ಹೇಳಿದರು. ಪ್ರಸ್ತುತ ಕಾಲ ಘಟ್ಟದಲ್ಲಿ ಪ್ರತೀ ವರ್ಷವೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಣ್ಣು ಮಕ್ಕಳ ಮೇಲುಗೈ ಸಾಧಿಸುತ್ತಾರೆ. ಅದು ಎಸ್ಸೆಸ್ಸೆಲ್ಸಿಗೆ ಸೀಮಿತವಾಗಿರಬಾರದು. ಉನ್ನತ ಮಟ್ಟದ ಶಿಕ್ಷಣದ ಸಾಧನೆ ಹಾಗೂ ಉದ್ಯೋಗವನ್ನು ಗಿಟ್ಟಿಸಿಕೊಳ್ಳುವವರೆಗೂ ಮುಂದುವರೆಸಬೇಕು ಎಂದರು.
ಜಾಥಾಕ್ಕೆ ಚಾಲನೆ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಅಂಗವಾಗಿ ಟೌನ್ಹಾಲ್ ವೃತ್ತದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಜಾಥಾಕ್ಕೆ ಚಾಲನೆ ನೀಡಿದರು. ಜಾಥವು ಎಂ.ಜಿ.ರಸ್ತೆ ಮುಖಾಂತರ ಸಾಗಿ ಬಾಲಭವನದಲ್ಲಿ ಕೊನೆಗೊಂಡಿತು.
ಪ್ರಧಾನಿ ನರೇಂದ್ರ ಮೋದಿ ಬೇಟಿ ಬಚಾವೋ ಬೇಟಿ ಪಡಾವೋ’ ಎಂಬ ಘೋಷಣೆ ಮೂಲಕ ಹೆಣ್ಣುಮಕ್ಕಳ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ನ್ಯಾ.ರಾಘವೇಂದ್ರ ಶೆಟ್ಟಿಗಾರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ