ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿರುವ ವರದಿಯನ್ನು ಸರ್ಕಾರ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.
ಸಮಿತಿಯು ವರದಿ ಸಲ್ಲಿಸಿ ಎರಡು ವರ್ಷ ಕಳೆದಿದೆ. ಈ ಸಂಬಂಧ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 230 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ತೋರಿದೆ. ಈ ಸಮುದಾಯಗಳ ಕುರಿತು ಕಾಳಜಿ ಇದ್ದಂತೆ ಕಾಣುತ್ತಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ವರದಿ ಜಾರಿಗೆ ಮುಂದಾಗದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದ್ದು, ಅಕ್ಟೋಬರ್ 9ರಂದು ಸರ್ಕಾರದಿಂದ ಆಯೋಜಿಸಿರುವ ವಾಲ್ಮೀಕಿ ಜಯಂತಿ ಬಹಿಷ್ಕರಿಸುತ್ತೇವೆ. ಜತೆಗೆ ನಮ್ಮ ನಡಿಗೆ ಸ್ವಾಮೀಜಿ ಕಡೆಗೆ ಹೆಸರಿನಡಿ ಕಾರ್ಯಕ್ರಮ ರೂಪಿಸಿ ಬಿಎಸ್ಪಿ ಬೆಂಬಲ ಸೂಚಿಸಲಿದೆ. ಧರಣಿಗೆ ಈಗಾಗಲೇ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ ಸೇರಿ ಹತ್ತಾರು ಮಠದ ಸ್ವಾಮೀಜಿಗಳು, ಹಲವು ಸಂಘಟನೆಗಳು ಕೈಜೋಡಿಸಿವೆ ಎಂದು ತಿಳಿಸಿದರು.
ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಚಕ್ರವರ್ತಿ, ಕಾರ್ಯದರ್ಶಿ ಎನ್.ಪ್ರಕಾಶ್ ಇತರರಿದ್ದರು.