ಕಲಬುರಗಿ: ಕೇಂದ್ರ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಹೇಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಖಜಾಂಚಿಯಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರವು ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ನೆರೆ ಪರಿಹಾರ ನೀಡಿದೆ. ಸಿದ್ದರಾಮಯ್ಯ ಅವರು 14 ಬಾರಿ ಬಜೆಟ್ ಮಂಡಿಸಿದ್ದಾರೆ. ನೆರೆ ಹಾಗೂ ಬರ ಪರಿಹಾರ ಹಣ ಹೇಗೆ ಬಿಡುಗಡೆಯಾಗುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಹಿಂದಿನ ಎಲ್ಲ ಸರ್ಕಾರಗಳು ಇಂತಹ ಸಂದರ್ಭಗಳಲ್ಲಿ ಎಷ್ಟು ಹಣ ಬಿಡುಗಡೆ ಮಾಡಿವೆ ಎಂಬ ತುಲನಾತ್ಮಕ ಲೆಕ್ಕವನ್ನು ಬಹಿರಂಗಪಡಿಸಲಿ. ಆಗ ನಾನು ಅವರನ್ನು ನಾಯಕ ಎಂದು ಒಪ್ಪಿಕೊಳ್ಳುತ್ತೇನೆ ಎಂದರು.
ಅದ್ಧೂರಿ ಸಾಹಿತ್ಯ ಸಮ್ಮೇಳನ: ಕಲಬುರಗಿಯಲ್ಲಿ ಫೆಬ್ರವರಿ ಮೊದಲ ವಾರದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನಕ್ಕೆ ಸರ್ಕಾರವಷ್ಟೇ ಹಣ ನೀಡಬೇಕಿಲ್ಲ. ದಾನಿಗಳು ನೆರವೂ ದೊರೆಯಲಿದೆ. ಎಲ್ಲರನ್ನೂ ಒಳಗೊಂಡು ಸಾಹಿತ್ಯದ ಹಬ್ಬ ನಡೆಯಲಿದೆ ಎಂದು ತಿಳಿಸಿದರು.
ಶೃಂಗೇರಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಾಧ್ಯಕ್ಷರ ವಿವಾದದ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವರು ಅದೇ ಜಿಲ್ಲೆಯವರು. ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.