ಹನೂರು : ತಾಲೂಕಿನ ಮಲೆಮಹದೇಶ್ವ ಬೆಟ್ಟದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶನಿವಾರ ಅಯೋಜಿಸಿದ್ದ ಗಡಿನಾಡು ಕನ್ನಡ ಉತ್ಸವದ ಕನ್ನಡ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು.
ಈ ವೇಳೆ ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ಸದಾನಂದ ಮಾತನಾಡಿ, ಕನ್ನಡ ರಾಜ್ಯೋತ್ಸವದ 50ರ ಸಂಭ್ರಮಾಚರಣೆ ಹಿನ್ನೆಲೆ ರಾಜ್ಯ ಸರ್ಕಾರ ಕನ್ನಡ ನೆಲ, ಜಲ ಹಾಗೂ ಭಾಷೆಯನ್ನು ಉಳಿಸಿ ಬೆಳೆಸುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ . ಈ ದೆಸೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿವರ್ಷ ಗಡಿನಾಡು ಉತ್ಸವವನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಇದೀಗ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಭಾಗವು ತಮಿಳುನಾಡಿನ ಗಡಿಯಂಚಿನಲ್ಲಿ ಇರುವುದರಿಂದ ಜನರಲ್ಲಿ ಕನ್ನಡ ಜಾಗೃತಿ ಮೂಡಿಸುವುದು, ಭಾಷಾಭಿಮಾನ ಬೆಳೆಸುವುದು ಹಾಗೂ ಶಾಲೆಗಳನ್ನು ಉತ್ತೇಜಿಸಿ, ಪ್ರೋತ್ಸಾಹಿಸುವ ಸಲುವಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಈ ದೆಸೆಯಲ್ಲಿ ಸರ್ಕಾರವು ಸಹ ಹೆಚ್ಚು ಸಹಕಾರ ನೀಡುತ್ತಿರುವುದು ಸಂತಸದ ಸಂಗತಿ. ಇದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಬಳಿಕೆ ಪಟ್ಟಣದ ವಿವಿಧೆ ಬಡಾವಣೆಯಲ್ಲಿ ಜಾಥಾ ಸಂಚರಿಸಿ ಕನ್ನಡ ಭಾಷೆ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಕೊಳ್ಳೇಗಾಲ ತಹಸೀಲ್ದಾರ್ ಮಂಜುಳಾ, ಬಿಇಒ ಶಿವರಾಜು, ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಾಕ್ಷರಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ರಾಮನಗರದ ಸತೀಶ್, ತುಮಕೂರಿನ ನರಸಿಂಹರಾಜು, ಬಳ್ಳಾರಿಯ ಶಿವಾಜಿರಾವ್ ಹಾಗೂ ಜಿಲ್ಲಾ ಹಾಗೂ ತಾಲೂಕು ಸಂಘದ ಪದಾಧಿಕಾರಿಗಳಿದ್ದರು.