ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಗೋವಾ ಕನ್ನಡಿಗರಿಗೆ ಭರವಸೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ನಂತರ ಇದೇ ಮೊದಲ ಬಾರಿ ಗೋವಾಕ್ಕೆ ಶನಿವಾರ ಭೇಟಿ ನೀಡಿದ್ದ ಅವರು, ದಕ್ಷಿಣ ಗೋವಾದ ಜುವಾರಿ ನಗರದ ಕನ್ನಡಿಗರ ಸಮಸ್ಯೆ ಆಲಿಸಿದರು.
ಈ ವೇಳೆ ಮಾತನಾಡಿದ ಅವರು, ಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ್ಸ್ರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಲ್ಲಿ ಗೋವಾದಲ್ಲಿಯೂ ಕನ್ನಡ ಭವನ ನಿರ್ಮಿಸಲು ನಿವೇಶನ ನೀಡುವಂತೆ ಹಲವು ಬಾರಿ ಗೋವಾ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ, ಭೂಮಿ ನೀಡಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ, ಈ ಬಾರಿ ಕರ್ನಾಟಕ ಸರ್ಕಾರವೇ ಒಂದು ಎಕರೆ ಜಮೀನು ಖರೀದಿಸಲಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಗೋವಾದ ಒಂದೆರೆಡು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ ಭಾಗದ ಜಿಲ್ಲಾಧಿಕಾರಿ ಅವರನ್ನು ಸಂಪರ್ಕಿಸಿ, ಶೀಘ್ರವೇ ಜಾಗದ ಖರೀದಿ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಆಯವ್ಯಯದಲ್ಲೇ ಅನುದಾನ ಪಡೆದು, ಅವರಿಂದಲೇ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.
ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಮತ್ತೀಹಳ್ಳಿ, ಗೋವಾ ಕನ್ನಡ ಸಾಹಿತ್ಯ ಪರಿಷತ್, ಗೋವಾ ರಕ್ಷಣಾ ವೇದಿಕೆ ಹಾಗೂ ವಿವಿಧ ಗೋವಾ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.