ಹೊಸಪೇಟೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಬೆಳಗ್ಗೆ ೧೫೦ ಅಡಿ ಎತ್ತರದ ಧ್ವಜಸ್ತಂಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಧ್ವಜಾರೋಹಣ ನೆರವೇರಿಸಿದರು.
ಇಲ್ಲಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಬೆಳಗ್ಗೆ ೮ ಗಂಟೆಗೆ ಹಚ್ಚೇವು ಕನ್ನಡದ ದೀಪ ಹಾಗೂ ಬಾರಿಸು ಕನ್ನಡ ಡಿಂಡಿಮವ ಹಿನ್ನೆಲೆ ಗೀತೆಯೊಂದಿಗೆ ನಾಡ ಧ್ವಜ ಆಕಾಶದಲ್ಲಿ ರಾರಾಜಿಸಿತು.
ಇದಕ್ಕೂ ಮುನ್ನ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಸಚಿವ ಆನಂದ ಸಿಂಗ್, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ ಜೀರೆ ಮತ್ತಿತರರು ಪುಷ್ಪಾರ್ಪಣೆ ಮಾಡಿ, ಭಕ್ತಿ ಸಲ್ಲಿಸಿದರು.
ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು, ಗೃಹ ರಕ್ಷಕ ದಳ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.