ಚಿಕ್ಕೋಡಿ : ಕನ್ನಡ ರಾಜ್ಯೋತ್ಸವವು ಒಂದು ದಿನ ಮಾತ್ರ ಆಚರಿಸಿ ಮರೆತುಬಿಡುವ ಹಬ್ಬವಲ್ಲ. ಬದುಕಿನುದ್ದಕ್ಕೂ ಕನ್ನಡ ಪ್ರೀತಿ ಮೆರೆಯೋಣ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಪಟ್ಟಣದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 65ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕನ್ನಡಾಂಬೆಯ ಸೇವೆ ಮಾಡುವುದರ ಜತೆಗೆ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸೋಣ ಎಂದರು. ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಎಸ್.ಯುಕೇಶಕುಮಾರ ಮಾತನಾಡಿ, ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ದೇಶದಲ್ಲೇ ಮುಂಚೂಣಿಯಲ್ಲಿದ್ದು, 8 ಜ್ಞಾನಪೀಠ ಪ್ರಶಸ್ತಿ ಪಡೆದ ಹೆಮ್ಮೆ ಇದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಉರ್ಮಿಲಾ ಪಾಟೀಲ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಡಿಡಿಪಿಐ ಗಜಾನನ ಮನ್ನಿಕೇರಿ, ಡಿವೈಎಸ್ಪಿ ಮನೋಜ ಪಾಟೀಲ, ತಾಲೂಕು ವೈಧ್ಯಾಧಿಕಾರಿ ಡಾ.ವಿಠ್ಠಲ ಶಿಂಧೆ, ಆರ್ಟಿಒ ಭೀಮನಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಡಾ.ಸುಂದರ ರೋಗಿ ಇದ್ದರು. ತಹಸೀಲ್ದಾರ್ ಸುಭಾಷ ಸಂಪಗಾವಿ ಸ್ವಾಗತಿಸಿದರು. ಎಸ್.ಎಸ್.ಸೊಲ್ಲಾಪುರೆ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ.ಮೇಕನಮರಡಿ ವಂದಿಸಿದರು.