ನವದೆಹಲಿ/ಬೆಂಗಳೂರು: ರಾಜ್ಯದೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮದಲ್ಲಿ ಇಡೀ ತಿಂಗಳು ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ಕರೆ ನೀಡಿದ್ದು, ಇಂದಿನಿಂದಲೇ ನಾಡಿನೆಲ್ಲೆಡೆ ರಾಜ್ಯೋತ್ಸವ ಸಡಗರ ಕಳೆಗಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲೇ ಶುಭಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಪ್ರಧಾನಿ ಶುಭ ಹಾರೈಸಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023
ಕರ್ನಾಟಕ ಸಂಭ್ರಮ-50ರ ಅಭಿಯಾನದಲ್ಲಿ ಇಂದು ಏನೇನು ?
* ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಕಾರ್ಯಕ್ರಮಗಳು ನಡೆಯಲಿವೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ 68 ಸಾಧಕರು ಮತ್ತು 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರದಾನ ಸಮಾರಂಭ ಬುಧವಾರ ಸಂಜೆ ಏರ್ಪಾಟು.
* ಎಲ್ಲರ ಮನಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ, ‘ಕರ್ನಾಟಕ ಸಂಭ್ರಮ-50: ಉಸಿರಾಯಿತು ಕರ್ನಾಟಕ ಹೆಸರಾಗಲಿ ಕರ್ನಾಟಕ ಎನ್ನುವ ಘೋಷವಾಕ್ಯ ಬರೆಯುವುದು.
* ಬೆಳಗ್ಗೆ 9ಕ್ಕೆ ಬಾನುಲಿಯಲ್ಲಿ ನಾಡಗೀತೆ ಮೊಳಗಲಿದೆ. ರಾಷ್ಟ್ರಗೀತೆಗೆ ಗೌರವ ಅರ್ಪಿಸುವ ಹಾಗೆ ಎಲ್ಲರೂ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ
* ಎಲ್ಲ ಜಿಲ್ಲಾ, ತಾಲೂಕು, ಗ್ರಾ.ಪಂ. ಕೇಂದ್ರಗಳಲ್ಲಿ ರಾಷ್ಟ್ರ ಧ್ವಜಾರೋಹಣ, ರಾಷ್ಟ್ರ ಗೀತೆ, ನಾಡಗೀತೆ, ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ.
* ಹುಯಿಲಗೋಳ ನಾರಾಯಣ ಅವರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪು ಅವರ ‘ಎಲ್ಲಾದರು ಇರು ಎಂದಾದರು ಇರು’, ದ.ರಾ.ಬೇಂದ್ರೆಯವರ ‘ ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕರ ‘ ಹೊತ್ತಿತೋ ಹೊತ್ತಿತು ಕನ್ನಡದ ದೀಪ’ ಮತ್ತು ಚನ್ನವೀರ ಕಣವಿಯವರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ
* ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆಸರ್ಕಾರಿ, ನಿಗಮ-ಮಂಡಳಿಗಳ ಕಚೇರಿಗಳು, ಬ್ಯಾಂಕ್ಗಳು ಹಾಗೂ ಸಂಘ-ಸಂಸ್ಥೆಗಳು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಅಳವಡಿಸಿಕೊಂಡು ಐದು ಗೀತೆಗಳನ್ನು ಹಾಡುವುದು ಕಡ್ಡಾಯ
* ಸಂಜೆ 5ಕ್ಕೆ ಆಯಾ ಊರಿನ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟವನ್ನು ಬಾನೆತ್ತರಕ್ಕೆ ಹಾರಿಸುವುದು.
* ರಾತ್ರಿ 7ಕ್ಕೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸುವುದು.
ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಮೈಸೂರಿನ ಜವರಪ್ಪ ಭಾಜನ