ಹೊಸಪೇಟೆ: ಪ್ರತಿಭಟನೆ, ಆನ್ಲೈನ್ ಅಭಿಯಾನದ ಬಳಿಕ ಕನ್ನಡ ವಿಶ್ವವಿದ್ಯಾಲಯದ ಹೊರಗುತ್ತಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವೇತನ ಪಾವತಿಗೆ ಸರ್ಕಾರ 3.52 ಕೋಟಿ ರೂ. ಬಿಡುಗಡೆ ಮಾಡಿದೆ.
ಕಳೆದ ಹತ್ತು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಗುತ್ತಿಗೆ ಸಿಬ್ಬಂದಿ, ನಿರಂತರ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ವಿವಿ ಕುಲಪತಿ ಸಹ, ಆರು ಕೋಟಿ ರೂ. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಸರ್ಕಾರ ಮೊದಲ ಹಂತವಾಗಿ ಮೂರೂವರೆ ಕೋಟಿ ರೂ. ಬಿಡುಗಡೆ ಮಾಡಿದೆ. ಕರೊನಾ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೌಕರರಿಗೆ ಸರಿಯಾಗಿ ಸಂಬಳ ನೀಡಿರಲಿಲ್ಲ. ವಿವಿಧ ಕನ್ನಡಪರ ಸಂಘಟನೆಗಳು ಕನ್ನಡ ವಿವಿ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಟ್ವಿಟರ್, ಫೇಸ್ಬುಕ್ ನಲ್ಲಿ ಅಭಿಯಾನ ನಡೆಸಿದ್ದವು. ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.
ಡಿಎಂಎಫ್ನಿಂದ 10 ಕೋಟಿ ರೂ.ಗೆ ಮನವಿ: ಜಿಲ್ಲಾ ಖನಿಜ ನಿಧಿಯಿಂದ ಕನ್ನಡ ವಿವಿ ಅಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು. ಆದರೆ, ಈವರೆಗೆ ಹಣ ಬಿಡುಗಡೆಯಾಗಿಲ್ಲ.