ಕಾರಟಗಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲೂಕು ಘಟಕ ನೇತೃತ್ವದಲ್ಲಿ ಕೂಲಿಕಾರರು ಪಟ್ಟಣದ ತಹಸಿಲ್ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ಕೃಷಿ ಕೂಲಿಕಾರರ ಬಗ್ಗೆ ಸರ್ಕಾರಕ್ಕೆ ಕನಿಷ್ಠ ಕಾಳಜಿವಹಿಸಿಲ್ಲ. ಉದ್ಯೋಗಕ್ಕಾಗಿ ಪರದಾಡುವಂತಾಗಿದೆ. ಕೊಪ್ಪಳವನ್ನು ಅತಿವೃಷ್ಟಿ ಜಿಲ್ಲೆಯನ್ನಾಗಿ ಘೋಷಿಸಿ ನರೇಗಾ ಯೋಜನೆಯಡಿ ಹೆಚ್ಚುವರಿ 50 ಮಾನವ ದಿನಗಳ ಕೂಲಿ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬೇಕು. ನರೇಗಾದಲ್ಲಿನ ಎಂಎನ್ಎನ್ಎಫ್ ತಂತ್ರಾಂಶ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಸಿಂಗನಾಳ ಗ್ರಾಮದಲ್ಲಿ 40 ವರ್ಷಗಳಿಂದ ಸರ್ಕಾರಿ ಜಮೀನನ್ನು ಉಳುಮೆ ಮಾಡುವ ಹಾಗೂ 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಬಡ ರೈತ ಕುಟುಂಬಗಳಿಗೆ ಸಾಗುವಳಿ ಚೀಟಿ ನೀಡಬೇಕು. ಈ ಕುರಿತು ಅನೇಕ ಹೋರಾಟಗಳನ್ನು ನಡೆಸಿದರೂ ಕಂದಾಯ ಇಲಾಖೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಿರಸ್ತೇದಾರ್ ಉಮಾಮಹೇಶ್ವರಗೆ ಮನವಿ ಸಲ್ಲಿಸಲಾಯಿತು.