ಕಾರಟಗಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಶಾಸಕ ಬಸವರಾಜ ದಢೇಸುಗೂರುಗೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಬುಧವಾರ ಮನವಿ ಸಲ್ಲಿಸಿದರು.
ಸಂಕಷ್ಟದ ಪರಿಸ್ಥಿತಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸಕಾಲಕ್ಕೆ ವೇತನ ದೊರೆಯುತ್ತಿಲ್ಲ. ದುಡಿಮೆಗೆ ತಕ್ಕಂತೆ ಸಂಬಳ ನೀಡುತ್ತಿಲ್ಲ. ಕೋವಿಡ್ ಪರಿಸ್ಥಿತಿಯಲ್ಲಿ ಕುಟುಂಬ ನಿರ್ವಹಣೆ ಸಮಸ್ಯೆಯಾಗಿದೆ. ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಮೇಲೆ ಕೆಲಸದಿಂದ ತೆಗೆದು ಹಾಕುವ ಒತ್ತಡವನ್ನು ಆರೋಗ್ಯ ಕೇಂದ್ರವಾರು ಮೂಲಕ ಮಾಡುತ್ತಿದ್ದಾರೆ. ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಪದಾಧಿಕಾರಿಗಳಾದ ಅನ್ವರ್, ಶರಣು, ಶಿಲ್ಪಾ, ಪ್ರಮೀಳಾ, ಮಲ್ಲನಗೌಡ, ಉಮೇಶ್, ಬಸನಗೌಡ, ಅಮಿನ್ ಸಾಬ್, ಶಿವಲಿಂಗಮ್ಮ ಸೇರಿ ಇತರರಿದ್ದರು.