ಸಾಗರ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ವತ್ತು ಮಾಜಿ ಯೋಧರ ಕಲ್ಯಾಣ ಟ್ರಸ್ಟ್ನಿಂದ ಜು.26ರಂದು ಬೆಳಗ್ಗೆ 9ಕ್ಕೆ ನಗರಸಭಾ ರಂಗಮಂದಿರದಲ್ಲಿ 24ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ಕೆ.ಅಣ್ಣಪ್ಪ ಹೇಳಿದರು.
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಾಲ್ಕು ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿರುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಬೃಹತ್ ಬೈಕ್ ರ್ಯಾಲಿ, ಎನ್ಸಿಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿ ಆಧಾರಿತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ನಾ.ಡಿಸೋಜ, ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಡಿವೈಎಸ್ಪಿ ರೋಹನ್ ಜಗದೀಶ್, ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಯುವಜನರಲ್ಲಿ ಸೈನ್ಯದ ಮಹತ್ವ, ಕಾರ್ಗಿಲ್ ಕಾರ್ಯಾಚರಣೆ ಮಹತ್ವ ತಿಳಿಸಿಕೊಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ಬಂದಿರುವ ಯೋಧರು ಇಂದಿಗೂ ಸರ್ಕಾರಿ ಸೌಲಭ್ಯಕ್ಕಾಗಿ ಪರಿತಪಿಸುತ್ತಿದ್ದಾರೆ. ಸಾವಿರಾರು ಯೋಧರು ಭೂಮಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದು, ಸರ್ಕಾರ ಮಾಜಿ ಯೋಧರ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಬಿ.ಟಿ.ಸೋಮನ್, ರಂಗರಾಜ್ ಬಾಳೆಗುಂಡಿ, ಚಂದ್ರಪ್ಪ, ಜಿ.ಎಸ್.ವೆಂಕಟೇಶ್, ಭಾಸ್ಕರ್, ಧರ್ಮಪ್ಪ ಇದ್ದರು.